ಮಹಾರಾಷ್ಟ್ರದ ಲಾತೂರ್ ಲೋಕಸಭಾ ಕ್ಷೇತ್ರದಿಂದ ಕಳೆದ ಬಾರಿ ಜಯಗಳಿಸಿದ್ದ ಸುಧಾಕರ್ ಶ್ರಂಗಾರೆ ಅವರನ್ನೇ ಬಿಜೆಪಿಯು ಈ ಬಾರಿಯೂ ಕಣಕ್ಕಿಳಿಸಿದೆ. 2019ರ ಚುನಾವಣೆಯಲ್ಲಿ ಸುಧಾಕರ್ ಅವರು 2,89,111 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಮಚೀಂದ್ರ ಕಾಮಂತ್ ಅವರನ್ನು ಪರಾಭವಗೊಳಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಿರಿಸಿಕೊಂಡು ಸುಧಾಕರ್ ಅವರು ಮತಯಾಚಿಸುತ್ತಿದ್ದಾರೆ. ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಮನೋಜ್ ಜರಾಂಗೆ ಅವರು ನಡೆಸುತ್ತಿರುವ ಹೋರಾಟವು ಈ ಕ್ಷೇತ್ರದ ಚುನಾವಣೆಯ ಮೇಲೂ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಚುನಾವಣಾ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಮರಾಠ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಈ ಕ್ಷೇತ್ರದಲ್ಲಿ ಮತದಾರರು ಯಾರ ಕೈ ಹಿಡಿಯುವರು ಎಂಬುದನ್ನು ಕಾದು ನೋಡಬೇಕಾಗಿದೆ.