ಚಿಕ್ಕಮಗಳೂರು: ಕೆಲವು ದಿನಗಳಿಂದ ಮೌನವಾಗಿದ್ದ ನಕ್ಸಲರು ಜಿಲ್ಲೆಯ ಗಡಿಭಾಗದ ಮೂರು ಗ್ರಾಮಗಳಿಗೆ ಶನಿವಾರ ಭೇಟಿ ನೀಡಿ ತಮ್ಮ ಅಸ್ತಿತ್ವವನ್ನು ಸಾಬೀತುಪಡಿಸಿದ್ದಾರೆ.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಕೂಡ್ಲು, ಶಿವಮೊಗ್ಗ ಜಿಲ್ಲೆಯ ಆಗುಂಬೆ ಸಮೀಪದ ಮೇಲುಗದ್ದೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಉಳುಮಡಿ ಗ್ರಾಮಗಳಿಗೆ ಭೇಟಿ ನೀಡಿರುವ ನಕ್ಸಲರು ತಮಗೆ ಬೆಂಬಲ ನೀಡಬೇಕು, ಪೊಲೀಸರಿಗೆ ಮಾಹಿತಿ ನೀಡಬಾರದು ಎಂದು ತಾಕೀತು ಮಾಡಿದ್ದಾರೆ.
ಸಹಾಯ ಯಾಚನೆ: 22 ಜನರಿದ್ದ ಶಸ್ತ್ರಸಜ್ಜಿತ ನಕ್ಸಲರ ತಂಡ ಮೂರೂ ಜಿಲ್ಲೆಗಳ ಒಟ್ಟು 20 ಮನೆಗಳಿಗೆ ಭೇಟಿ ನೀಡಿ ಗ್ರಾಮಸ್ಥರ ಸಹಾಯ ಯಾಚಿಸಿದೆ. ಉಡುಪಿ ಜಿಲ್ಲೆಯಲ್ಲಿ ಸಕ್ರಿಯವಾಗಿದ್ದ ವಿಕ್ರಂ ಗೌಡ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಕ್ರಿಯವಾಗಿದ್ದ ಬಿ.ಜಿ.ಕೃಷ್ಣಮೂರ್ತಿ ತಂಡದ ಸದಸ್ಯರು ಒಗ್ಗೂಡಿ ಗ್ರಾಮಗಳಿಗೆ ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಕ್ಸಲ್ ಚಟುವಟಿಕೆ ಸಂಪೂರ್ಣ ನಿಯಂತ್ರಣದಲ್ಲಿದೆ. ನಕ್ಸಲ್ ಚಲನವಲನದ ಬಗ್ಗೆ ಮಾಹಿತಿಯೇ ಇಲ್ಲ. ಸೈಟಿಂಗ್ಸ್ ಸಾಕಷ್ಟು ಕಡಿಮೆಯಾಗಿದೆ ಎಂಬ ಜಿಲ್ಲಾ ಪೊಲೀಸರ ಹೇಳಿಕೆಗೆ ನಕ್ಸಲರ ಚಟುವಟಿಕೆ ಉತ್ತರ ನೀಡಿದಂತಿದೆ. ನಕ್ಸಲ್ ಪ್ರಭಾವಿತ ಪ್ರದೇಶಗಳಿಗೆ ಪೊಲೀಸ್ ಮಹಾ ನಿರ್ದೇಶಕ ಅಜಯ್ಕುಮಾರ್ ಸಿಂಗ್ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಮತ್ತು ಉತ್ತರ ಭಾರತದಲ್ಲಿ ನಕ್ಸಲರ ವಿರುದ್ಧ ನಡೆಯುತ್ತಿರುವ ಕಠಿಣ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ನಕ್ಸಲರ ಈ ಚಟುವಟಿಕೆ ಮಹತ್ವ ಪಡೆದುಕೊಂಡಿದೆ.