ವಾಷಿಂಗ್ಟನ್: ಭಾರತದಲ್ಲಿ ಜಾರಿಗೆ ತರಲಾಗಿರುವ ಆರ್ಥಿಕ ಸುಧಾರಣಾ ಕ್ರಮಗಳು ಫಲ ನೀಡುತ್ತಿದ್ದು, ಜನರಿಗೆ ಪ್ರಯೋಜನಕಾರಿಯಾಗಿವೆ ಎಂದು ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ (ಐಎಂಎಫ್) ತಿಳಿಸಿದೆ.
‘ಸುಸ್ಥಿರ ಆರ್ಥಿಕ ಅಭಿವೃದ್ಧಿ ಸಾಧಿಸಲು ಭಾರತ ಇನ್ನೂ ಸಾಕಷ್ಟು ದೂರ ಕ್ರಮಿಸಬೇಕಾಗಿದೆ. ಹಲವು ಅಡೆತಡೆಗಳ ಮಧ್ಯೆಯೂ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯು ಸರ್ಕಾರದ ಹಣಕಾಸು ವ್ಯವಸ್ಥೆಗೆ ಗಟ್ಟಿ ತಳಹದಿ ಹಾಕಿದೆ’ ಎಂದು ‘ಐಎಂಎಫ್’ನ ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಡೇವಿಡ್ ಲಿಪ್ಟನ್ ಹೇಳಿದ್ದಾರೆ.
‘ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳಲ್ಲಿ ಕಂಡುಬಂದಿರುವ ಹಲವಾರು ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳು ಮಹತ್ವದ ನಿರ್ಧಾರಗಳಾಗಿವೆ. ಆರ್ಥಿಕ ಸೇರ್ಪಡೆ ವಿಷಯದಲ್ಲಿ ಪ್ರಗತಿ ಸಾಧಿಸಲು ಮತ್ತು ಭಾರತವನ್ನು ಆರ್ಥಿಕ ಶಕ್ತಿಯನ್ನಾಗಿ ಬೆಳೆಸಲು ತಂತ್ರಜ್ಞಾನದ ವ್ಯಾಪಕ ಬಳಕೆ ಮತ್ತು ಇತರ ಸುಧಾರಣಾ ಕ್ರಮಗಳನ್ನು ಜಾರಿಗೆ ತರಲು ಆದ್ಯತೆ ನೀಡಬೇಕಾಗಿದೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.