ಬೆಂಗಳೂರು: ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಗುರುವಾರದಿಂದ (ನ.23) ಎರಡು ದಿನ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಹೂಡಿಕೆದಾರರ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಕೈಗಾರಿಕೆ ಸಚಿವ ಆರ್. ವಿ. ದೇಶಪಾಂಡೆ ಹೇಳಿದರು.
ಸಮ್ಮೇಳನದ ಪೂರ್ವಸಿದ್ಧತೆಗಳ ಕುರಿತು ಬುಧವಾರ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸಮ್ಮೇಳನದಲ್ಲಿ 1,000 ಕ್ಕೂ ಅಧಿಕ ವಸ್ತುಪ್ರದರ್ಶನ ಮಳಿಗೆಗಳನ್ನು ನಿರ್ಮಿಸಲಾಗಿದೆ. 300 ದೊಡ್ಡ ಕೈಗಾರಿಕೆಗಳು, ಸುಮಾರು 700 ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಭಾಗವಹಿಸಲಿವೆ. ರಾಜ್ಯದಲ್ಲಿ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡಲು ಹಾಗೂ ಆ ಕ್ಷೇತ್ರದಲ್ಲಿ ಇರುವವರ ಮಧ್ಯೆ ಒಡನಾಟ ಬೆಸೆಯಲು ಇದು ಉತ್ತಮ ವೇದಿಕೆಯಾಗಲಿದೆ. ರಾಜ್ಯದಲ್ಲಿ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಉಚಿತವಾಗಿ ಮಳಿಗೆಗಳನ್ನು ನೀಡಲಾಗಿದೆ ಎಂದರು.
ಆರು ವಿವಿಧ ವಿಷಯಗಳ ಮೇಲೆ ವಿಚಾರ ಸಂಕಿರಣಗಳನ್ನು ಹಮ್ಮಿಕೊಳ್ಳಲಾಗಿದೆ. ವಿಷಯ ತಜ್ಞರು, ಜನಪ್ರತಿನಿಧಿಗಳು ಹಾಗೂ ಉದ್ದಿಮೆದಾರರು ವಿಷಯಗಳನ್ನು ಮಂಡಿಸಲಿದ್ದಾರೆ. ‘ಶ್ರೇಷ್ಠ ರಫ್ತು’ ಮತ್ತು ‘ಶ್ರೇಷ್ಠ ಉತ್ಪಾದನಾ ಪ್ರಶಸ್ತಿ’ ಪ್ರದಾನ ಹಾಗೂ ಸಮಾರೋಪ ಸಮಾರಂಭವನ್ನು ನ.24ರ ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.