ನವದೆಹಲಿ: ‘ನಗದು ಲಭ್ಯತೆ ಪರಿಸ್ಥಿತಿಯು ಸಂಪೂರ್ಣವಾಗಿ ಸಾಮಾನ್ಯ ಸ್ಥಿತಿಗೆ ಮರಳಿದ್ದು, ದೇಶದಾದ್ಯಂತ ಬ್ಯಾಂಕ್ಗಳ ಎಟಿಎಂಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ’ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ಚಂದ್ರ ಗರ್ಗ್ ಹೇಳಿದ್ದಾರೆ.
‘ಅಗತ್ಯ ಇರುವಷ್ಟು ಪ್ರಮಾಣದಲ್ಲಿ ಕರೆನ್ಸಿ ಲಭ್ಯವಾಗುತ್ತಿದೆ. ದೇಶದ ಯಾವುದೇ ಭಾಗದಿಂದ ನಗದು ಕೊರತೆಯ ದೂರುಗಳು ಕೇಳಿಬರುತ್ತಿಲ್ಲ. ನಗದು ಚಲಾವಣೆಯಲ್ಲಿ ಹೆಚ್ಚಳ ಕಂಡುಬಂದಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕಳೆದ ತಿಂಗಳು ಐದಾರು ರಾಜ್ಯಗಳಲ್ಲಿ ನಗದು ಕೊರತೆ ಸಮಸ್ಯೆ ಎದುರಾಗಿತ್ತು. ಪರಿಸ್ಥಿತಿ ಸುಧಾರಿಸಲು ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಹಲವಾರು ಕ್ರಮಗಳನ್ನು ಕೈಗೊಂಡಿದ್ದವು.
‘ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಳ ಕಳವಳಕ್ಕೆ ಎಡೆಮಾಡಿಕೊಟ್ಟಿರುವುದು ನಿಜ. ದೇಶದ ಕಚ್ಚಾ ತೈಲದ ಆಮದು ವೆಚ್ಚ 2017–18ರಲ್ಲಿ ₹ 4.82 ಲಕ್ಷ ಕೋಟಿಗೆ ತಲುಪಿದೆ. ಸರ್ಕಾರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ದೇಶಿ ಆರ್ಥಿಕತೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರದಂತೆ ನೋಡಿಕೊಳ್ಳುತ್ತಿದೆ. ಆರ್ಥಿಕ ಬೆಳವಣಿಗೆಯ ಮಾನದಂಡಗಳು ಸದೃಢವಾಗಿವೆ. ಜಿಡಿಪಿ ದರ ಪರಿಷ್ಕರಿಸುವ ಸಾಧ್ಯತೆ ಇಲ್ಲ’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.