ಮೈಸೂರು: ಯಕೃತ್ ಸಮಸ್ಯೆಯಿಂದ ಬಳಲುತ್ತಿರುವ ಎಚ್.ಡಿ.ಕೋಟೆ ಶಾಸಕ ಎಸ್.ಚಿಕ್ಕಮಾದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕುವೆಂಪುನಗರದ ಅರವಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ.
ಜೆಡಿಎಸ್ ಮುಖಂಡ ಎಚ್.ವಿಶ್ವನಾಥ್ ಹಾಗೂ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಅವರು ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅವರ ನೂರಾರು ಅಭಿಮಾನಿಗಳು ಆಸ್ಪತ್ರೆಯ ಎದುರು ಜಮಾಯಿಸಿದ್ದರು.
ಈ ಮೊದಲು ಚಿಕ್ಕಮಾದು ಅವರು ಸರಸ್ವತಿಪುರಂನಲ್ಲಿರುವ ಸಿಗ್ಮಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು, ಅರವಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ವರ್ಷದ ಹಿಂದೆಯಷ್ಟೇ ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ವಿಶ್ರಾಂತಿ ಪಡೆಯದೆ ಹೆಚ್ಚು ಓಡಾಡಿದ್ದರಿಂದ ಯಕೃತ್ ಸೋಂಕು ಉಂಟಾಗಿತ್ತು. ಅಲ್ಲದೆ, ಅವರ ಧ್ವನಿ ಬದಲಾಗಿತ್ತು. ಹೀಗಾಗಿ, ಆಗಸ್ಟ್ನಲ್ಲಿ ಅಮೆರಿಕದ ಎಂ.ಡಿ.ಆ್ಯಂಡರ್ಸನ್ ರಿಸರ್ಚ್ ಸೆಂಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ಆದರೂ ಚೇತರಿಕೆ ಕಂಡಿರಲಿಲ್ಲ. ವರ್ಷದ ಹಿಂದೆ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.