ಕೋಟ(ಬ್ರಹ್ಮಾವರ) : ‘ಸರ್ಕಾರದ ಸಾಲಮನ್ನಾ ಯೋಜನೆಯಲ್ಲಿ ಪ್ರಾಮಾಣಿಕ ರೈತರಿಗೆ ಅನ್ಯಾಯವಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸಾಸ್ತಾನದಲ್ಲಿ ಈಚೆಗೆ ಉಡುಪಿ ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಆಶ್ರಯದಲ್ಲಿ ನಡೆದ ಕೋಟ ಹೋಬಳಿ ಮಟ್ಟದ ಸಮಗ್ರ ಕೃಷಿ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಮಾರ್ಚ್ 31ರ ಅನಂತರ ಹಳೆ ಸಾಲವನ್ನು ಮರುಪಾವತಿಸಿ, ಹೊಸ ಸಾಲವನ್ನು ಪಡೆಯದ ರೈತರ ಸಾಲವನ್ನೂ ಮನ್ನಾ ಮಾಡಬೇಕು. ಇಲ್ಲವಾದರೆ ಪ್ರಾಮಾಣಿಕವಾಗಿ ರೈತರಿಗೆ ಬೆಲೆ ಇಲ್ಲವಾಗುತ್ತದೆ. ಕೃಷಿ ಸಚಿವರು ಹಾಗೂ ಮುಖ್ಯಮಂತ್ರಿ ಜತೆ ಚರ್ಚೆ ನಡೆಸಿದ್ದೇನೆ’ ಎಂದರು. ಐರೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಸೆಸ್ ರೋಡಿಗ್ರಸ್ ಅಧ್ಯಕ್ಷತೆ ವಹಿಸಿದ್ದರು.
ಬೆಳೆ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನಗಳಿಸಿದ ರಘು ಮಡಿವಾಳ ಅವರಿಗೆ ₹15 ಸಾವಿರ ಹಾಗೂ ತಾಲ್ಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನಗಳಿಸಿದ ರಾಧು ಮರಕಾಲ್ತಿ ಅವರಿಗೆ ₹10ಸಾವಿರ ನಗದು ಬಹುಮಾನ ನೀಡಿ ಗೌರವಿಸಲಾಯಿತು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಕೃಷಿ ಮಾಹಿತಿ ಪುಸ್ತಕ ಬಿಡುಗಡೆಗೊಳಿಸಿದರು.
ಎ.ಪಿ.ಎಂ.ಸಿ ಸದಸ್ಯ ಕೃಷ್ಣ ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ಭುಜಂಗ ಶೆಟ್ಟಿ, ಉಮೇಶ ಶೆಟ್ಟಿ, ಜ್ಯೋತಿ ಉದಯ ಪೂಜಾರಿ, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರತ್ನಾ ನಾಗರಾಜ್ ಗಾಣಿಗ, ಪಾಂಡೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋವಿಂದ ಪೂಜಾರಿ, ಜಂಟಿ ಕೃಷಿ ನಿರ್ದೇಶಕ ಚಂದ್ರಶೇಖರ ನಾಯ್ಕ, ಬ್ರಹ್ಮಾವರ ವಲಯ ಕೃಷಿ ಸಂಶೋಧನಾ ಕೇಂದ್ರದ ಡಾ.ಎಂ.ಹನುಮಂತಪ್ಪ, ಕೃಷಿ ವಿಜ್ಞಾನ ಕೇಂದ್ರದ ಡಾ.ಧನಂಜಯ್ , ಕೋಟ ಕೃಷಿ ಕೇಂದ್ರದ ಅಧಿಕಾರಿ ಚಂದ್ರಶೇಖರ್ ಉಪಾಧ್ಯ , ಜಂಟಿ ನಿರ್ದೇಶಕ ಮೋಹನ್ರಾಜ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.