ADVERTISEMENT

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ

ಬಾಗಲಕೋಟೆ ಮುಸ್ಲಿಂ ಯೂನಿಟಿ ಸಂಘಟನೆ ಕಾರ್ಯಕರ್ತರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2018, 5:23 IST
Last Updated 21 ಏಪ್ರಿಲ್ 2018, 5:23 IST

ಬಾಗಲಕೋಟೆ: ದೇಶದಲ್ಲಿ ಬಾಲಕಿಯರು ಹಾಗೂ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡುತ್ತಿರುವ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಇಲ್ಲಿನ ಬಾಗಲಕೋಟೆ ಮುಸ್ಲಿಂ ಯೂನಿಟಿ ಸಂಘಟನೆ ವತಿಯಿಂದ ಶುಕ್ರವಾರ ಜಿಲ್ಲಾಡ ಳಿತದ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.

ನವನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಬಂದ ಸಂಘಟನೆಯ ನೂರಾರು ಕಾರ್ಯಕರ್ತರು, ಅತ್ಯಾಚಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಅಪರಾಧಿಗಳಿಗೆ ಕಠಿಣ ಶಿಕ್ಷೆ ಆಗದಿರುವುದೇ ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಲು ಕಾರಣ. ಹಾಗಾಗಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯನ್ನೇ ವಿಧಿಸಬೇಕು. ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸರಿಯಾದ ರಕ್ಷಣೆ ಇಲ್ಲದಂತಾಗಿದೆ. ಅಮಾನವೀಯ ಘಟನೆಗಳು ನಡೆದಾಗ ಕಠಿಣ ಕ್ರಮಕ್ಕೆ ಮುಂದಾಗದಿರುವುದು ಖಂಡನೀಯ ಎಂದು ದೂರಿದರು.

ADVERTISEMENT

ಕೂಡಲೇ ರಾಷ್ಟ್ರಪತಿಗಳು ಇಂತಹ ಘೋರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ರಕ್ಷಣೆ ಕೊಡಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ದೇಶದಾದ್ಯಂತ ಸೂಕ್ತ ಕಾನೂನು ರಚಿಸಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕು ಎಂದರು.

ಇಮಾಮ್ ಜಾಫರ್ ಬೇಪಾರಿ, ಸಿಕಂದರ್ ಅಥಣಿ, ಅಯ್ಯುಬ್ ಪುಣೇಕರ್, ನೂರ್‌ಸಾಬ್ ಟಂಕಸಾಲಿ, ರಿಯಾಜ್ ಅಹ್ಮದ್ ಯಡಹಳ್ಳಿ, ರಫೀಕ್ ಇಳಕಲ್ ಸೇರಿದಂತೆ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.