ADVERTISEMENT

ಕಾರ್ಯಕರ್ತರೆಲ್ಲರೂ ಕೆಪಿಸಿಸಿ ಕಾರ್ಯಾಧ್ಯಕ್ಷರು

ಬೂತ್‌ ಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರ ಕಾರ್ಯಾಗಾರ: ಎಸ್‌.ಆರ್‌. ಪಾಟೀಲ ಅಭಿಮತ

​ಪ್ರಜಾವಾಣಿ ವಾರ್ತೆ
Published 13 ಜುಲೈ 2017, 11:39 IST
Last Updated 13 ಜುಲೈ 2017, 11:39 IST
ಕಾರ್ಯಕರ್ತರೆಲ್ಲರೂ ಕೆಪಿಸಿಸಿ ಕಾರ್ಯಾಧ್ಯಕ್ಷರು
ಕಾರ್ಯಕರ್ತರೆಲ್ಲರೂ ಕೆಪಿಸಿಸಿ ಕಾರ್ಯಾಧ್ಯಕ್ಷರು   

ಜಮಖಂಡಿ: ‘ಕಾಂಗ್ರೆಸ್‌ ಕಾರ್ಯಕರ್ತರೆಲ್ಲರೂ ಕೆಪಿಸಿಸಿ ಕಾರ್ಯಾಧ್ಯಕ್ಷರು ಎಂದು ಭಾವಿಸಿ ಕಾಂಗ್ರೆಸ್‌ ಪಕ್ಷವನ್ನು ಸಂಘಟಿಸಿ ಬಾಗಲಕೋಟೆ ಜಿಲ್ಲೆಯ ಎಲ್ಲ 7 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಹೊಸ ದಾಖಲೆ ನಿರ್ಮಿಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್‌. ಪಾಟೀಲ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ತಾಲ್ಲೂಕಿನ ಹುಲ್ಯಾಳ ಗ್ರಾಮದ ಗುರುದೇವಾಶ್ರಮದಲ್ಲಿ ಜಮಖಂಡಿ ಬ್ಲಾಕ್‌ ಕಾಂಗ್ರೆಸ್‌ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಬೂತಮಟ್ಟದ ಕಾರ್ಯಕರ್ತರ ಕಾರ್ಯಾಗಾರದಲ್ಲಿ ನೀಡಿದ ವಿಶೇಷ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ರಾಜ್ಯ ವಿಧಾನಸಭೆಗೆ 2018 ರಲ್ಲಿ ಜರುಗಲಿರುವ ಚುನಾವಣೆಗೆ ಕಾರ್ಯಕರ್ತರು ಈಗಿನಿಂದಲೆ ಸನ್ನದ್ಧರಾಗಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 2ನೇ ಬಾರಿಗೆ ಅಧಿಕಾರದ ಗದ್ದುಗೆ ಏರುವ ಅವಕಾಶ ಮಾಡಿಕೊಡಬೇಕು ಎಂದು ಕೂಡಲಸಂಗಮದಲ್ಲಿ ಈಚೆಗೆ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಉತ್ತರ ಕರ್ನಾಟಕದ ಕಾಂಗ್ರೆಸ್‌ ಶಕ್ತಿಯನ್ನು ಪ್ರದರ್ಶಿಸಲಾಗಿದೆ. ಸಮಾವೇಶದ ಯಶಸ್ಸು 2018ರ ಚುನಾವಣೆಗೆ ಕಾಂಗ್ರೆಸ್‌ಗೆ ಭದ್ರಬುನಾದಿ ಎನಿಸಿದ್ದು, ಗೆಲುವಿನ ದಿಕ್ಸೂಚಿಯಾಗಿದೆ ಎಂದರು.

ADVERTISEMENT

ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡದಿದ್ದರೆ ವಿಧಾನಸಭೆಗೆ ಮುತ್ತಿಗೆ ಹಾಕುವುದಾಗಿ ಘೋಷಿಸಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ರಾಷ್ಟ್ರೀಯ ಬ್ಯಾಂಕುಗಳಲ್ಲಿ ರೈತರು ಪಡೆದ ₹ 42 ಸಾವಿರ ಕೋಟಿ ಸಾಲಮನ್ನಾ ಮಾಡಿಸಲು ಈಗ ಲೋಕಸಭೆಗೆ ಮುತ್ತಿಗೆ ಹಾಕಲಿ ಎಂದು ಲೇವಡಿ ಮಾಡಿದರು.

ಎಐಸಿಸಿ ಕಾರ್ಯದರ್ಶಿ ಮಾಣಿಕಂ ಠಾಕೂರ್‌ ಮಾತನಾಡಿ, ‘ಒಂದು ದೇಶ ಒಂದು ತೆರಿಗೆ’ ಎಂಬ ಘೋಷವಾಕ್ಯದೊಂದಿಗೆ ಜಿಎಸ್‌ಟಿ ಜಾರಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಬೇರೆ ಬೇರೆ ತೆರಿಗೆ ದರಗಳನ್ನು ಹೇರಿ ಒಂದೇ ತೆರಿಗೆ ಎಂದು ಹೇಳಿಕೊಳ್ಳುತ್ತ ಹೆಚ್ಚಿನ ತೆರಿಗೆ ವಸೂಲಿ ಮಾಡುತ್ತಿದ್ದಾರೆ. ಜಿಎಸ್‌ಟಿ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಾರಸಮಲ್‌ ಜೈನ, ಶಾಸಕ ಸಿದ್ದು ನ್ಯಾಮ ಗೌಡ ಮಾತನಾಡಿದರು. ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ. ಸೌದಾಗರ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೆಪಿಸಿಸಿ ಕಾರ್ಯದರ್ಶಿ ಜಯಸಿಂಹ, ಜವಳಿ ನಿಗಮದ ಉಪಾಧ್ಯಕ್ಷ ನಜೀರ್‌ ಕಂಗನೊಳ್ಳಿ, ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಕಲಬುರ್ಗಿ, ಜಮಖಂಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವರ್ಧಮಾನ ನ್ಯಾಮಗೌಡ, ಸಾವಳಗಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕಲ್ಲಪ್ಪ ಗಿರಡ್ಡಿ ವೇದಿಕೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.