ADVERTISEMENT

‘ಭ್ರಷ್ಟಾಚಾರದಿಂದ ಅಭಿವೃದ್ಧಿ ಕುಂಠಿತ’

​ಪ್ರಜಾವಾಣಿ ವಾರ್ತೆ
Published 28 ಮೇ 2017, 10:33 IST
Last Updated 28 ಮೇ 2017, 10:33 IST
ಬಾಗಲಕೋಟೆಯ ಜಿಲ್ಲಾಡಳಿತ ಭವನದ ಎದುರು ಶನಿವಾರ ಜೆಡಿಎಸ್ ಕಾರ್ಯಕರ್ತರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು
ಬಾಗಲಕೋಟೆಯ ಜಿಲ್ಲಾಡಳಿತ ಭವನದ ಎದುರು ಶನಿವಾರ ಜೆಡಿಎಸ್ ಕಾರ್ಯಕರ್ತರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು   

ಬಾಗಲಕೋಟೆ: ‘ರಾಜ್ಯ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ’ ಎಂದು ಆರೋಪಿಸಿ ಜಾತ್ಯಾತೀತ ಜನತಾದಳ ಜಿಲ್ಲಾ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತ ಭವನದ ಮುಂದೆ ಶನಿವಾರ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಜೆಡಿಎಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಮೋಹನ್.ಎಂ.ಜಿಗಳೂರ ಮಾತನಾಡಿ, ‘ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಹಾಗೂ ಪುನರ್ನಿರ್ಮಾಣ ಕೆಲಸ ಕಾರ್ಯಗಳು ನಿಗದಿತ ಅವಧಿಯೊಳಗೆ ಮುಗಿಸಬೇಕು. ಜಮೀನು ನೀಡಿದ ಸಂತ್ರಸ್ತರ ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ ಮತ್ತು ಪ್ರತಿಯೊಂದು ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಯಿಂದಾಗಿ ಜನತೆ ರೋಶಿ ಹೋಗಿದ್ದಾರೆ. ಕುಡಿಯುವ ನೀರಿನ ಸಮಸ್ಯೆ, ನವನಗರದ ಯುನಿಟ್–1 ಹಸ್ತಾಂತರ ಹಾಗೂ ಮರಳು ನೀತಿಯ ಬಗ್ಗೆ ಎರಡು ಪಕ್ಷಗಳು ಸ್ವಾರ್ಥ ಹಾಗೂ ಸ್ವಪ್ರತಿಷ್ಠೆಯ ರಾಜಕಾರಣ ಮಾಡುತ್ತಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಮರಳು ಸಮಸ್ಯೆ ಯಿಂದಾಗಿ ಕಟ್ಟಡ ಕಾರ್ಮಿಕರು ಉದ್ಯೋಗ ವಂಚಿತರಾಗಿ ಬೇರೆ ರಾಜ್ಯಗಳಿಗೆ ಗುಳೆ ಹೊರಟಿದ್ದಾರೆ. ನವನಗರ ಮತ್ತು ವಿದ್ಯಾಗಿರಿಯಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ರೈಲ್ವೆ ನಿಲ್ದಾಣದಲ್ಲಿ ಟಿಕೆಟ್ ಪಡೆಯಲು ಒಂದೇ ಕೌಂಟರ್ ಇರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ. ಇಲಾಖೆ ಜನರ ಕಷ್ಟಗಳಿಗೆ ಸ್ಪಂದಿಸಿ, ಎರಡು ಕೌಂಟರ್ ತೆರೆಯಬೇಕು ಎಂದು ಆಗ್ರಹಿಸಿದರು.

ಪ್ರಧಾನ ಕಾರ್ಯದರ್ಶಿ ಸಂಗಮೇಶ ಅಪ್ಪಗೋಳ, ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟರಾವ್ ದೇಸಾಯಿ, ಮುಖಂಡರಾದ ಬಿ.ಡಿ.ಕಾಂಬಳೆ, ವಿಠ್ಠಲ ವಾಡಕರ, ಯಾಸಿನ್ ಮನಿಯಾರ, ಜಿ.ಎಸ್.ಕಿಣಗಿ, ಗೋಪಾಲ ಲಮಾಣಿ, ಸುರೇಶ ರಾಯಗೊಂಡ, ಎಚ್.ಡಿ.ಪವಾರ, ಪರಮಾನಂದ ಹುನಗುಂದ  ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.