ಬಾದಾಮಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬಾದಾಮಿ ಮತಕ್ಷೇತ್ರದಿಂದ ಸ್ಪರ್ಧಿಸಲಿದ್ದು, 24ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅವರನ್ನು ಗೆಲ್ಲಿಸಲು ಎಲ್ಲರೂ ಸಿದ್ಧರಾಗಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ ಕಾರ್ಯಕರ್ತರಿಗೆ ಸೂಚಿಸಿದರು.
ಇಲ್ಲಿನ ಕಾಳಿದಾಸ ಶಿಕ್ಷಣ ಸಂಸ್ಥೆಯಲ್ಲಿ ಪಕ್ಷದ ಮುಖಂಡರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಐತಿಹಾಸಿಕ ದಾಖಲೆ ನಿರ್ಮಿಸಬೇಕು ಎಂದು ತಿಳಿಸಿದರು.
‘ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರುವುದು ನಿಶ್ಚಿತ. ಸಿದ್ದರಾಮಯ್ಯ ಅವರನ್ನು ಗೆಲ್ಲಿಸುವುದರಿಂದ ಐತಿಹಾಸಿಕ ಬಾದಾಮಿ ಮತಕ್ಷೇತ್ರವನ್ನು ಅಭಿವೃದ್ಧಿ ಮಾಡಬಹುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರೆ, ‘ಸಿದ್ದರಾಮಯ್ಯ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡೋಣ‘ ಎಂದು ಶಾಸಕ ಬಿ.ಬಿ. ಚಿಮ್ಮನಕಟ್ಟಿ ಕಾರ್ಯಕರ್ತರಿಗೆ ಹೇಳಿದರು.
ಕಾಳಿದಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಪುತ್ರ ಭೀಮಸೇನ ಚಿಮ್ಮನಕಟ್ಟಿ, ಎಂ.ಬಿ. ಹಂಗರಗಿ, ಎನ್.ಬಿ. ಬನ್ನೂರ, ಡಾ. ಎಂ.ಎಚ್. ಚಲವಾದಿ, ಎಂ.ಡಿ. ಯಲಿಗಾರ,ಆರ್.ಡಿ. ದಳವಾಯಿ, ಆರ್.ಎಫ್. ಬಾಗವಾನ, ಬಿ.ಬಿ. ಸೂಳಿಕೇರಿ, ರಾಜು ಜವಳಿ, ಶಿವು ಹಿರೇಮಠ ಮೊದಲಾದ ಮುಖಂಡರು ಇದ್ದರು.
ಸ್ಪರ್ಧೆ ವಿಚಾರ ಕೈಬಿಟ್ಟ ಚಿಮ್ಮನಕಟ್ಟಿ:
ಹಾಲಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಅವರು, ಕಾರ್ಯಕರ್ತರ ಒತ್ತಾಯದ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಬೆಳಿಗ್ಗೆ ಚಿಂತನೆ ನಡೆಸಿದ್ದರು ಎನ್ನಲಾಗಿತ್ತು. ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಚಿಮ್ಮನಕಟ್ಟಿ ಅವರ ಮನೆಗೆ ತೆರಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಚಿಮ್ಮನಕಟ್ಟಿ ಅವರನ್ನು ದೂರವಾಣಿಯ ಮೂಲಕ ಮಾತನಾಡಿಸಿ ರಾಜಿ ಸಂಧಾನ ಮಾಡಿದರೆಂದು ತಿಳಿದುಬಂದಿದೆ. ಬಿ.ಬಿ. ಚಿಮ್ಮನಕಟ್ಟಿ ಅವರ ನೇತೃತ್ವದಲ್ಲಿಯೇ ಮತಕ್ಷೇತ್ರದಲ್ಲಿ ಪಕ್ಷದ ಪ್ರಚಾರ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ನಂತರ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ವಿಚಾರವನ್ನು ಕೈಬಿಟ್ಟರು ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.