ಕಿತ್ತಲಿ (ಬಾದಾಮಿ): ‘ಗ್ರಾಮೀಣ ಕುಟುಂಬಗಳಿಗೆ ಸ್ತ್ರೀಶಕ್ತಿ ಗುಂಪುಗಳು ಆರ್ಥಿಕ ಭದ್ರತೆಯನ್ನು ಒದಗಿಸಿವೆ. ಅವುಗಳು ಮಹಿಳೆಯರಿಗೆ ಸ್ವಾವಲಂಬಿ ಬದುಕನ್ನು ನಿರ್ಮಾಣ ಮಾಡಿ ಕೊಟ್ಟಿವೆ’ ಎಂದು ಮಂಜುನಾಥ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ಕಿತ್ತಲಿ ಗ್ರಾಮದಲ್ಲಿ ಶನಿವಾರ ಕೆವಿಜಿ ಬ್ಯಾಂಕ್ ಮತ್ತು ರೀಮ್ ಸಂಸ್ಥೆ ಆಶ್ರಯದಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಸಬಲೀಕರಣ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಬ್ಯಾಂಕಿನಲ್ಲಿ ಪಡೆದ ಸಾಲವನ್ನು ಸರಿಯಾಗಿ ಪಾವತಿಸಿದರೆ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ. ಹಾಗಾಗಿ ಗ್ರಾಹಕರು ಬ್ಯಾಂಕಿನ ಜೊತೆಗೆ ಸಹಕರಿಸಬೇಕು’ ಎಂದು ಕೆವಿಜಿ ಬ್ಯಾಂಕಿನ ವ್ಯವಸ್ಥಾಪಕ ಚೇತನ್ ಪಾಟೀಲ ಮನವಿ ಮಾಡಿದರು.
‘ಸ್ವಸಹಾಯ ಗುಂಪುಗಳಿಗೆ ವಿವಿಧ ಸಾಲ ಸೌಲಭ್ಯಗಳಿವೆ. ಮಹಿಳೆಯರು ಸದುಪಯೋಗ ಪಡೆಯಬೇಕು’ ಎಂದು ಯೂನಿಯನ್ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ವಾಸುದೇವ ಕರಣಿ ತಿಳಿಸಿದರು.
ಚಂದ್ರಶೇಖರ್ ಮುತ್ತಲಗೇರಿ, ಮಲ್ಲಪ್ಪ ಪೂಜಾರ , ಹನುಮಂತ ತೊಡಸಗೇರಿ ಮತ್ತು ಮಹಿಳಾ ಸಂಘದ ಸದಸ್ಯರು ಇದ್ದರು. ವಿದ್ಯಾರ್ಥಿಗಳಿಗೆ ಸ್ಪರ್ಧೆ: ಸ್ಥಳೀಯ ಯುನಿಯನ್ ಬ್ಯಾಂಕ್ ಆಶ್ರಯದಲ್ಲಿ ಸರ್ಕಾರಿ ಪ.ಪೂ ಕಾಲೇಜಿನಲ್ಲಿ ‘ಭ್ರಷ್ಟಾಚಾರ ಮುಕ್ತ ಭಾರತ’ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.
ಯೂನಿಯನ್ ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕ ವಾಸುದೇವ ಕರಣಿ ‘ಭ್ರಷ್ಟಾಚಾರ ಮುಕ್ತ ಭಾರತ’ ಬಗ್ಗೆ ಉಪನ್ಯಾಸ ನೀಡಿದರು. ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾಲೇಜಿನ ಪ್ರಾಚಾರ್ಯ ಎಂ.ಎಂ. ಹಿರೇಮಠ ಸ್ವಾಗತಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.