ಮುಧೋಳ: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯಿಂದ ಜನರು ಕಂಗಾಲಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲು ಚುನಾವಣೆಗಾಗಿ ಕಾಯುತ್ತಿದ್ದಾರೆ’ ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆ.ಆರ್.ಮಾಚಪ್ಪನವರ ಹೇಳಿದರು. ಅವರು ಶಾಸಕರ ಗೃಹ ಕಚೇರಿಯಲ್ಲಿ ತಾಲ್ಲೂಕಿನ ಬೆಳಗಲಿ ಗ್ರಾಮದ ಯುವಕರ ಪಕ್ಷ ಸೇರ್ಪಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಎಲ್ಲಡೆ ಪ್ರಧಾನಿ ಮೋದಿ ಹಾಗೂ ಬಿಜೆಪಿ ಪ್ರಭಾವ ಹೆಚ್ಚಾಗುತ್ತಾ ಸಾಗಿರುವುದರಿಂದ ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಯುವಕರು, ದಲಿತರು, ಮಹಿಳೆಯರು ಪಕ್ಷ ಸೇರ್ಪಡೆಯಾಗುತ್ತಿರುವುದು ಸಂತಸಕರ ವಿಷಯವಾಗಿದೆ’ ಎಂದರು.
ನಗರ ಘಟಕದ ಅಧ್ಯಕ್ಷ ಗುರುರಾಜ ಕಟ್ಟಿ ಮಾತನಾಡಿ ‘ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೆ ಖಚಿತವಾದ ವಾತವರಣವಿದೆ ಎಂದು ಕಾರ್ಯಕರ್ತರು ಉದಾಸೀನ ಮಾಡಬಾರದು. ಹೆಚ್ಚಿನ ಶ್ರಮವಹಿಸುವ ಮೂಲಕ ಹೆಚ್ಚು ಹೆಚ್ಚು ಜನರು ಪಕ್ಷಕ್ಕೆ ಸೇರ್ಪಡೆ ಮಾಡಬೇಕು’ ಎಂದು ಹೇಳಿದರು.
ಶಾಸಕ ಗೋವಿಂದ ಕಾರಜೋಳ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ.ಎಚ್.ಪಂಚಗಾಂವಿ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಎಲ್.ಕೆ.ಬಳಗಾನುರ, ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಶ್ರೀಕಾಂತ ಗುಜ್ಜನ್ನವರ, ಕುಮಾರ ಹುಲಕುಂದ, ಯುವ ಮೋರ್ಚಾ ಅಧ್ಯಕ್ಷ ಪ್ರದೀಪ ನಿಂಬಾಳಕರ, ಸೋನಪ್ಪಿ ಕುಲಕರ್ಣಿ, ನಾಗಪ್ಪ ಅಂಬಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.