ಬಳ್ಳಾರಿ: ‘ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಬಿಜೆಪಿಯ ಜಿಲ್ಲಾ ಘಟಕದ ಮುಖಂಡರು ನಗರದ ಜಿಲ್ಲಾಧಿಕಾರಿ ಕಚೇರಿಯ ತಹಶೀಲ್ದಾರ್ ಮೆಹತಾ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
‘ಸಂವಿಧಾನ ಉಳಿಸಿ ಸಂವಾದಕ್ಕೆ ಮೋದಿ ಅವರು ಬಂದಾಗ ಕುರ್ಚಿಗಳನ್ನು ತೂರಿ, ಗಲಭೆ ಸೃಷ್ಟಿಸಿ ಎಂದು ಮೇವಾನಿ ಅವರು ಚಿತ್ರದುರ್ಗದಲ್ಲಿ ಏ.6ರಂದು ಕರೆ ನೀಡಿದ್ದರು. ಅವರು ಪ್ರಧಾನಿ ಘನತೆಗೆ ಧಕ್ಕೆ ಉಂಟುಮಾಡುವ ಹುನ್ನಾರ ನಡೆಸಿದ್ದಾರೆ’ ಎಂದು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮುರಹರಿಗೌಡ ದೂರಿದರು.
‘ಮೇವಾನಿ ಹೇಳಿಕೆಯಿಂದ ಗಲಭೆ ಸೃಷ್ಟಿಯಾಗುವ ಸಾಧ್ಯತೆಗಳಿವೆ. ಹೀಗಾಗಿ ಪ್ರಧಾನಿ ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳಿಗೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕು. ಚುನಾವಣೆ ಆಯೋಗವು ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮೇವಾನಿ ಅವರನ್ನು ರಾಜ್ಯದ ಒಳಗಡೆ ಪ್ರವೇಶಿಸದಂತೆ ನಿಷೇಧಿಸಬೇಕು’ ಎಂದು ಒತ್ತಾಯಿಸಿದರು. ಮುಖಂಡರಾದ ಎ.ತಿಮ್ಮಾರೆಡ್ಡಿ, ಸಿ.ರಾಮಚಂದ್ರ ಇದ್ದರು,
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.