ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ಬಸರಕೋಡು ಗ್ರಾಮದಲ್ಲಿ 15ಕ್ಕೂ ಹೆಚ್ಚು ಜನರು ಶಂಕೆ ಡೆಂಗಿ ಜ್ವರದಿಂದ ಬಳಲುತ್ತಿದ್ದು, ಪಟ್ಟಣದ ಖಾಸಗಿ ಆಸ್ಪತ್ರೆ ಮತ್ತು ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದಾಗಿ ಇಡೀ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. 50ಕ್ಕೂ ಹೆಚ್ಚು ಜನರು ಶೀತ, ಕೆಮ್ಮು, ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ.
2500ಜನಸಂಖ್ಯೆ ಇರುವ ಈ ಗ್ರಾಮದಲ್ಲಿ ಸ್ವಚ್ಛತೆ ಮರೆಯಾಗಿದೆ, ರಸ್ತೆಯ ಎಲ್ಲೆಂದರಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪತ್ತಿಗೆ ಕಾರಣವಾಗಿದೆ. ಗ್ರಾಮದಲ್ಲಿರುವ ಚರಂಡಿಗಳನ್ನು ಸ್ವಚ್ಛಗೊಳಿಸಿ ಎರಡು ವರ್ಷ ಕಳೆದಿದೆ. ಚರಂಡಿ ನೀರು ಮುಂದೆ ಹರಿಯದೇ ಅಲ್ಲಲ್ಲಿ ಸ್ಥಗಿತಗೊಂಡಿದೆ. ಕೆಲವು ಕಡೆ ಮಣ್ಣಿನಿಂದಲೇ ಚರಂಡಿಗಳು ಆವೃತ ವಾಗಿದೆ. ಈ ಕುರಿತಂತೆ ಹಲವು ಬಾರಿ ಬನ್ನಿಗೋಳ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ. ಕೂಡಲೇ ಮೇಲಧಿಕಾರಿಗಳು ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ.
ಕುಡಿಯುವ ನೀರು: ಗ್ರಾಮದಲ್ಲಿ ಕುಡಿ ಯುವ ನೀರಿನ ಸಮಸ್ಯೆ ಇದ್ದು, ಪಂಚಾ ಯಿತಿಗೆ ಸೇರಿದ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆ ಆಗಿರುವುದರಿಂದ ಖಾಸಗಿ ಕೊಳವೆಬಾವಿಗಳನ್ನು ಅವಲಂಬಿಸುವಂತಾಗಿದೆ. ಗ್ರಾಮ ಪಂಚಾಯಿತಿಯಿಂದ ಸಂಪರ್ಕ ನೀಡಿ ರುವ ನೀರಿನ ಪೈಪ್ಲೇನ್ಲ್ಲಿ ದೋಷ ಕಂಡು ಬಂದಿದ್ದು ಕಶ್ಮಲ ನೀರು ಮಿಶ್ರ ಆಗಿದೆ ಎನ್ನಲಾಗುತ್ತಿದೆ. ಇದುವರೆಗೂ ವೈದ್ಯರು ಸೇರಿದಂತೆ ಆರೋಗ್ಯ ಇಲಾ ಖೆಯ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿಲ್ಲ. ಜ್ವರ ಪೀಡಿತರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.