ADVERTISEMENT

ಬಸ್‌ ಸೌಲಭ್ಯಕ್ಕೆ ವದಟ್ಟಿ ಗ್ರಾಮಸ್ಥರ ಆಗ್ರಹ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2017, 5:12 IST
Last Updated 11 ನವೆಂಬರ್ 2017, 5:12 IST

ಕುರುಗೋಡು: ವದಟ್ಟಿ ಗ್ರಾಮಕ್ಕೆ ಬಸ್‌ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಶುಕ್ರವಾರ ಪಟ್ಟಣದ ಬಸ್‌ ನಿಲ್ದಾಣ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

‘ವದಟ್ಟಿ ಗ್ರಾಮದಿಂದ ಪ್ರತಿನಿತ್ಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕುರುಗೋಡು ಮತ್ತು ಬಳ್ಳಾರಿ ಶಾಲಾ ಕಾಲೇಜುಗಳಿಗೆ ಹೋಗುತ್ತಾರೆ. ಸಕಾಲಕ್ಕೆ ಬಸ್ ಸೌಕರ್ಯ ಇಲ್ಲದಿರುವ ಕಾರಣ ಪರದಾಡುವಂತಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಬಸ್‌ ಸೌಲಭ್ಯ ಒದಗಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು’ ಎಂದು ವಿದ್ಯಾರ್ಥಿಯೊಬ್ಬರ ಪೋಷಕ ದಿವಾಕರ್ ಎಚ್ಚರಿಸಿದರು.

‘ಕಳೆದ 15 ದಿನಗಳಿಂದ ಗ್ರಾಮಕ್ಕೆ ಬಸ್ ಸಂಚಾರ ಸ್ಥಗಿತಗೊಂಡಿದೆ. ಪ್ರತಿನಿತ್ಯ 4 ಕಿ.ಮೀ. ನಡೆದುಕೊಂಡು ಬಂದು ಮುಖ್ಯರಸ್ತೆಯಿಂದ ಬಸ್‌ನಲ್ಲಿ ಪ್ರಯಾಣಿಸಬೇಕಾಗಿದೆ.
ಕೆಲವು ಬಾರಿ ಸಮಯಕ್ಕೆ ಸರಿಯಾಗಿ ಬಸ್ ಸಿಗುವುದಿಲ್ಲ. ವಿದ್ಯಾರ್ಥಿಗಳು ಬೆಳಗಿನ ತರಗತಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿದ್ಯಾಭ್ಯಾಸಕ್ಕೆ ಹಿನ್ನಡೆಯಾಗುತ್ತಿದೆ. ಕೂಡಲೇ ಬೆಳಿಗ್ಗೆ ಹಾಗೂ ಸಂಜೆ ಬಸ್ ವ್ಯವಸ್ಥೆ ಮಾಡಬೇಕು’ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ADVERTISEMENT

ಬಳಿಕ ಬಸ್ ನಿಲ್ದಾಣ ನಿಯಂತ್ರಣಾಧಿಕಾರಿ ಎರ್ರಿಸ್ವಾಮಿಗೆ ಅವರಿಗೆ ಮನವಿ ಸಲ್ಲಿಸಿದರು. ವಿದ್ಯಾರ್ಥಿಗಳ ಪೋಷಕರಾದ ವೀರೇಶ , ಎರ್ರಿಸ್ವಾಮಿ, ಹೊನ್ನೂರ್ ಸ್ವಾಮಿ, ತಿಪ್ಪೇಸ್ವಾಮಿ, ಶಿವಪ್ಪ, ಬುಜ್ಜಮ್ಮ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.