ಆನೇಕಲ್: ತಾಲ್ಲೂಕಿನಲ್ಲಿ ಎಲ್ಲ ಕೆರೆಗಳ ಅಭಿವೃದ್ಧಿಗೆ ಚಿಂತನೆ ಮಾಡಲಾಗಿದ್ದು, ಏತ ನೀರಾವರಿ ಮೂಲಕ 66 ಕೆರೆಗಳಿಗೆ ನೀರನ್ನು ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಈ ಮೂಲಕ ತಾಲ್ಲೂಕಿನಲ್ಲಿ ಅಂತರ್ಜಲ ಏರಿಕೆಗೆ ಸಹಕಾರಿ ಆಗಲಿದೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.
ತಾಲ್ಲೂಕಿನ ಮರಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡಿವಾಳ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ತಾಲ್ಲೂಕಿನ ಅಭಿವೃದ್ಧಿ ನಮ್ಮ ಆದ್ಯತೆ. ಹಾಗಾಗಿ ಐದು ವರ್ಷಗಳಲ್ಲಿ ಆನೇಕಲ್ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನದಿಂದ ಕೆಲಸ ಮಾಡಲಾಗಿದೆ. ಮಾಡಿರುವ ಅಭಿವೃದ್ಧಿ ಕಾರ್ಯಗಳು ಮುಂದಿನ ಚುನಾವಣೆಗೆ ನಮಗೆ ಶ್ರೀರಕ್ಷೆಯಾಗಿದೆ ಎಂದರು.
ಮರಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪುರುಷೋತ್ತಮ್ ರೆಡ್ಡಿ ಮಾತನಾಡಿ, ಮರಸೂರು ಗ್ರಾಮ
ಪಂಚಾಯಿತಿಯು ವಿಭಿನ್ನ ಕಾರ್ಯಕ್ರಮ
ಗಳ ಮೂಲಕ ಮಾದರಿಯಾಗಿದೆ. ಪಂಚಾಯಿತಿ ಊಟದ ಮನೆ, ಸರ್ಕಾರಿ ಶಾಲೆಯಲ್ಲಿ ಮಕ್ಕಳ ಮನೆ (ಎಲ್ಕೆಜಿ, ಯುಕೆಜಿ), ಸರ್ಕಾರಿ ಶಾಲೆಗಳ ಮಕ್ಕಳಿಗೆ ಅವಶ್ಯಕ ಸಾಮಗ್ರಿಗಳುಳ್ಳ ಕಿಟ್ ವಿತರಣೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ರಸ್ತೆಗಳ ಡಾಂಬರೀಕರಣ, ಶುದ್ಧ ಕುಡಿಯುವ ನೀರಿನ ಘಟಕಗಳು ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲಾಗಿದೆ ಎಂದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪ್ರೇಮಾ ಕಾವೇರಪ್ಪ, ಸದಸ್ಯರಾದ ಎಸ್.ಟಿ.ಡಿ.ರಮೇಶ್, ಎಂ.ಚಂದ್ರಪ್ಪ, ಉಮೇಶ್, ನಿರ್ಮಲಾನಂದ್, ಎಂ.ಕೃಷ್ಣಪ್ಪ, ಗೋಪಾಲರೆಡ್ಡಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.