ಆನೇಕಲ್: ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಜುಲೈ 29ರಂದು ಆನೇಕಲ್ನ ಶ್ರೀರಾಮ ಕುಟೀರದಲ್ಲಿ ನಡೆಯಲಿದೆ.
ಸಮ್ಮೇಳನ ಅಧ್ಯಕ್ಷರಾಗಿ ತಾಲ್ಲೂಕಿನ ವಣಕನಹಳ್ಳಿ ಗ್ರಾಮದ ಖ್ಯಾತ ಇತಿಹಾಸ ತಜ್ಞ, ನಿವೃತ್ತ ಪ್ರಾಧ್ಯಾಪಕ ದೇವರ ಕೊಂಡಾರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಆನೇಕಲ್ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ನವೀನ್ ಕುಮಾರ್ ಬಾಬು ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಸಮ್ಮೇಳನದ ವಿವರಗಳನ್ನು ಬಿಡುಗಡೆ ಮಾಡಿದರು.
‘ಸಮ್ಮೇಳನ, ಕನ್ನಡ ಅಕ್ಷರ ಜಾತ್ರೆಯನ್ನು ಯಶಸ್ವಿಗೊಳಿಸಲು ಹಲವಾರು ಪೂರ್ವಭಾವಿ ಸಭೆಗಳನ್ನು ನಡೆಸಿ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದರು.
‘ಸಮ್ಮೇಳನ ಯಶಸ್ವಿಗೊಳಿಸಲು ಸಾರ್ವಜನಿಕರು ಹಾಗೂ ವಿವಿಧ ಇಲಾಖೆಗಳು, ಸಾಹಿತಿ ಕಲಾವಿದರು ಹಾಗೂ ಸಂಘಟನೆಗಳ ಸಹಕಾರ ಕೋರಲಾಗಿದೆ’ ಎಂದರು.
ಸಮ್ಮೇಳನಾಧ್ಯಕ್ಷರ ಮೆರವಣಿಗೆಯು ಪೂರ್ಣ ಕುಂಭಗಳೊಂದಿಗೆ ವಿವಿಧ ಜನಪದ ಕಲಾತಂಡಗಳೊಂದಿಗೆ ಪಟ್ಟಣದಲ್ಲಿ ನಡೆಯಲಿದೆ. ಕವಿಗೋಷ್ಠಿ, ವಿಚಾರ ಸಂಕಿರಣ, ಸ್ಮರಣ ಸಂಚಿಕೆ ಬಿಡುಗಡೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಾಡುನುಡಿಯ ಬಗ್ಗೆ ಬೆಳಕು ಚೆಲ್ಲುವ ಹಾಗೂ ಕನ್ನಡ ಭಾಷೆಯ ಸಂಬಂಧದ ಆತಂಕಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ಆನೇಕಲ್ ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಹನುಮದಾಸ್, ಜಿಲ್ಲಾ ಕಸಾಪ ಮಹಿಳಾ ಪ್ರತಿನಿಧಿ ಸೌಭಾಗ್ಯ, ತಾಲ್ಲೂಕು ಕೋಶಾಧ್ಯಕ್ಷ ಅಪ್ಸರ್ ಅಲಿಖಾನ್, ಕರ್ನಾಟಕ ರಕ್ಷಣಾ ವೇದಿಕೆಯ ಲೋಕೇಶ್ ಗೌಡ, ನಾಗವೇಣಿ, ಕಾರ್ಯದರ್ಶಿಗಳಾದ ಎಂ. ಗೋವಿಂದರಾಜು, ಡಿ.ನಂದೀಶ್, ಮಹಿಳಾ ಪ್ರತಿನಿಧಿಗಳಾದ ರಾಜಮ್ಮ, ಅನುಪಮಾ, ವಿನೋದಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.