ADVERTISEMENT

‘ಬಿಜೆಪಿ ಆಡಳಿತದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲ’

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2017, 8:59 IST
Last Updated 21 ಸೆಪ್ಟೆಂಬರ್ 2017, 8:59 IST

ದೊಡ್ಡಬಳ್ಳಾಪುರ: ‘ಪ್ರಜಾಪ್ರಭುತ್ವ ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ, ಬದುಕುವ ಹಕ್ಕು ಇದೆ. ಆದರೆ ಕೇಂದ್ರದಲ್ಲಿನ ಬಿಜೆಪಿ ಆಡಳಿತದಲ್ಲಿ ಸಮಾನತೆ, ಸಮಾನ ಅವಕಾಶ ಇಲ್ಲದಾಗಿದೆ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಉಪಾಧ್ಯಕ್ಷ ಎಚ್.ಟಿ. ಸಾಂಗ್ಲಿಯಾನ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬಿಜೆಪಿ ಅಧಿಕಾರದಲ್ಲಿರುವ ಎಲ್ಲ ರಾಜ್ಯಗಳಲ್ಲೂ ಕ್ರಿಶ್ಚಿಯನ್‌ ಸೇರಿದಂತೆ ಅಲ್ಪಸಂಖ್ಯಾತರಿಗೆ ಸುರಕ್ಷತೆ ಇಲ್ಲದಾಗಿದೆ. ಇದಕ್ಕೆ ಸಾಕ್ಷಿಯಾಗಿ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಸಹ ಚರ್ಚ್ ಗಳ ಮೇಲೆ ದಾಳಿ ನಡೆದಿದ್ದನ್ನು ನಾವು ನೋಡಿದ್ದೇವೆ. ಅಲ್ಪಸಂಖ್ಯಾತರಿಗೆ ಸುರಕ್ಷತೆ ಇಲ್ಲದ ಕಾರಣದಿಂದಲೇ ಬಿಜೆಪಿ ತೊರೆದಿದ್ದು ’ಎಂದರು.

ಕಾಂಗ್ರೆಸ್‌ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ರತ್ನಪ್ರಭಾ ಮಾತನಾಡಿ, ‘ಸೆ 23 ರಂದು ಮಹಾದೇವಪುರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕಾಂಗ್ರೆಸ್‌ ಪಕ್ಷದ ಐದು ವರ್ಷಗಳ ಆಡಳಿತ ಸಾಧನೆಯ ಕಿರು ಹೊತ್ತಿಗೆಯನ್ನು ಮುಖ್ಯಮಂತ್ರಿ ಅವರು ಬಿಡುಗಡೆ ಮಾಡಲಿದ್ದಾರೆ’ ಎಂದರು.

ADVERTISEMENT

ರಾಜ್ಯದಲ್ಲಿನ ವಿರೋಧ ಪಕ್ಷಗಳನ್ನು ನಿರ್ಲಕ್ಷ್ಯ ಮಾಡದೆ ಎಲ್ಲರೂ ಪಕ್ಷದ ಗೆಲುವಿಗಾಗಿ ಶ್ರಮಿಸಬೇಕಿದೆ. ಕಾರ್ಯಕ್ರಮಗಳನ್ನು ಪಕ್ಷ ಸಂಘಟನೆ ದೃಷ್ಟಿಯಿಂದಲೇ ಮಾಡಬೇಕಿದೆ ಎಂದರು.

ಕಾಂಗ್ರೆಸ್‌ನ ಹಿರಿಯ ಮುಖಂಡ ಜಿ.ಎಂ.ಚನ್ನಪ್ಪ ಮಾತನಾಡಿ, ತೂಬಗೆರೆ ಹೋಬಳಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸೇರ್ಪಡೆಯಾದ ನಂತರ ಪಕ್ಷ ಸಂಘಟನೆಗೆ ತೀವ್ರ ಹಿನ್ನಡೆಯಾಗುತ್ತಿದೆ. ಸರ್ಕಾರದ ಯಾವುದೇ ಸೌಲಭ್ಯಗಳು ಬಂದರು ಸಹ ಇಲ್ಲಿನ ಜೆಡಿಎಸ್‌ ಪಕ್ಷದ ಕಾರ್ಯಕರ್ತರ ಪಾಲಾಗುತ್ತಿವೆ ಎಂದು ದೂರಿದರು.

ಕಾಂಗ್ರೆಸ್‌ ಜಿಲ್ಲಾ ಸಮಿತಿ ಅಧ್ಯಕ್ಷ ಮುನಿಶಾಮಣ್ಣ , ಕಾಂಗ್ರೆಸ್‌ ರಾಜ್ಯ ಕಾರ್ಯದರ್ಶಿ ಡಾ.ನಾಗಲಕ್ಷ್ಮೀ, ತೂಬಗೆರೆ ಹೋಬಳಿ ಅಧ್ಯಕ್ಷ ಜಗನ್ನಾಥಚಾರ್‌, ಪ್ರಧಾನ ಕಾರ್ಯದರ್ಶಿ ಆಂಜಿನಪ್ಪ, ಜಿಲ್ಲಾ ಉಪಾಧ್ಯಕ್ಷ ಜಿ.ಎನ್‌.ರಂಗಪ್ಪ, ಪ್ರಧಾನ ಕಾರ್ಯದರ್ಶಿ ರಾಮಚಂದ್ರಣ್ಣ, ಎಸ್‌.ಆರ್‌.ಮುನಿರಾಜು, ದೇವನಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಎಂ.ಮುನೇಗೌಡ, ಜಿಲ್ಲಾ ಎಸ್ಟಿ ವಿಭಾಗದ ಉಪಾಧ್ಯಕ್ಷ ಮುನಿಕೃಷ್ಣಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.