ADVERTISEMENT

ಬೆಂಗಳೂರಿನಲ್ಲಿ ರೈತರಿಂದ ಹಣ ವಸೂಲಿ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2017, 6:56 IST
Last Updated 5 ಡಿಸೆಂಬರ್ 2017, 6:56 IST

ವಿಜಯಪುರ: ಗ್ರಾಮಾಂತರ ಪ್ರದೇಶಗಳಲ್ಲಿನ ರೈತರು ಕಷ್ಟಪಟ್ಟು ಬೆಳೆದ ತರಕಾರಿಗಳನ್ನು ಮಾರಾಟ ಮಾಡಲೆಂದು ಬೆಂಗಳೂರಿನ ಕೆ.ಆರ್.ಮಾರು
ಕಟ್ಟೆಗೆ ತೆಗೆದುಕೊಂಡು ಹೋಗುತ್ತಿರುವ ರೈತರಿಂದ ಹಫ್ತಾ ವಸೂಲಿ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ (ಕೋಡಿಹಳ್ಳಿ ಚಂದ್ರಶೇಖರ್ ಬಣ) ಹೋಬಳಿ ಘಟಕದ ಅಧ್ಯಕ್ಷ ಮಂಡಿಬೆಲೆ ನಾರಾಯಣಸ್ವಾಮಿ ಆರೋಪಿಸಿದರು.

ಇಲ್ಲಿಂದ ಬೆಂಗಳೂರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲು ತೆರಳುವ ವೇಳೆ ಅವರು ಮಾತನಾಡಿದರು. ‘ತುಂಬಾ ಬಹಳಷ್ಟು ಕಷ್ಟಪಟ್ಟು 1,500 ಅಡಿಯಿಂದ ನೀರು ತೆಗೆದು ತರಕಾರಿ ಬೆಳೆಯುತ್ತಿದ್ದೇವೆ. ಮಹಾನಗರದ ಜನರು ಸೇರಿದಂತೆ ರಾಜ್ಯದ ಜನರ ಹಸಿವು ನೀಗಿಸುತ್ತಿದ್ದೇವೆ ’ ಎಂದರು.

‘ಯಾವುದೇ ಸರ್ಕಾರಗಳು ಬಂದರು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಸಾಧ್ಯವಾಗಿಲ್ಲ. ನಾವು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸಲು ಸಾಧ್ಯವಾಗಿಲ್ಲ’ ಎಂದು ಟೀಕಿಸಿದರು.

ADVERTISEMENT

‘ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ನಾವು ಕಷ್ಟಪಟ್ಟು ಬೆಳೆದ ಬೆಳೆ ಮಾರುಕಟ್ಟೆಗೆ ತಂದರೆ ನಮ್ಮಿಂದ ತೆರಿಗೆಯ ನೆಪದಲ್ಲಿ ಹಣ ವಸೂಲಿ ಮಾಡುವ ಕೆಲಸ ನಡೆಯುತ್ತಿದೆ’ ಎಂದರು. ಇದಕ್ಕೆ ಕಡಿವಾಣ ಹಾಕಬೇಕಾಗಿದೆ ಎಂದರು.

ಹಣ ನೀಡಲು ನಿರಾಕರಿಸಿದ ರೈತರ ಮೇಲೆ ಗೂಂಡಾಗಳಂತೆ ವರ್ತಿಸುತ್ತಿರುವ ಕೆಲವು ಕಿಡಿಗೇಡಿಗಳು ಭಯದ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ ಎಂದು ದೂರಿದರು.ಮಾರುಕಟ್ಟೆಯ ಬಳಿ ರೈತರಿಗೆ ಮೀಸಲಾಗಿದ್ದ ಶೆಡ್‌ಗಳನ್ನು ಕೋಟ್ಯಂತರ ರೂಪಾಯಿ ಲಾಭಕ್ಕಾಗಿ ಹರಾಜು ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದರು.

ಇಷ್ಟೆಲ್ಲಾ ನಡೆಯುತ್ತಿದ್ದರೂ ಅಲ್ಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾತ್ರ ಕಣ್ಣು ಮುಚ್ಚಿ ಕುಳಿತಿದೆ, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದರು. ಆದ್ದರಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಬಿಬಿಎಂಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದರು.

ಸರ್ಕಾರ ಮಾರುಕಟ್ಟೆಗೆ ಹೋಗುವ ರೈತರಿಗೆ ಸೂಕ್ತ ಭದ್ರತೆ ನೀಡಬೇಕು. ತೆರಿಗೆ ರೂಪದಲ್ಲಿ ವಸೂಲಿ ಮಾಡುತ್ತಿರುವ ಹಣ  ವಸೂಲಿ ನಿಲ್ಲಿಸಬೇಕು ಎಂದರು. ರೈತರು ಬೆಳೆಯುವ ಬೆಳೆಗಳಿಗೆ ವೈಜ್ಞಾನಿಕವಾದ ಬೆಲೆ ನಿಗದಿ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

50ಕ್ಕೂ ಹೆಚ್ಚು ಮಂದಿ ರೈತರು ವಿಜಯಪುರದಿಂದ ಬೆಂಗಳೂರಿಗೆ ತೆರಳಿದರು. ಹೋಬಳಿ ಘಟಕದ ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಕೇಶವ್, ರೈತ ಸಂಘದ ಮುಖಂಡರಾದ ಪಿ. ರಂಗನಾಥಪುರ ನಟರಾಜ್, ನಾರಾಯಣಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.