ಆನೇಕಲ್: ಮಹಿಳೆಯರು ಎಲ್ಲಾ ರಂಗಗಳಲ್ಲೂ ಉನ್ನತ ಸಾಧನೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಅವಕಾಶ ಬಳಸಿಕೊಂಡು ಯಶಸ್ಸು ಸಾಧಿಸಬೇಕು ಎಂದು ಶಾಸಕ ಬಿ.ಶಿವಣ್ಣ ಸಲಹೆ ನೀಡಿದರು. ಅವರು ತಾಲ್ಲೂಕಿನ ಅತ್ತಿಬೆಲೆ ಯಲ್ಲಿ ಮಹಿಳಾ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಮಹಿಳಾ ದಿನಾಚರಣೆ ಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಹಿಳಾ ಸಬಲೀಕರಣಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿದ್ದು ಸ್ತ್ರೀಶಕ್ತಿ ಗುಂಪುಗಳಿಗೆ ಸಾಲ ಸೌಲಭ್ಯ ನೀಡಿ ಸ್ವಾವಲಂಬಿಗಳಾಗಲು ಪ್ರೋತ್ಸಾಹ ನೀಡುತ್ತಿದೆ. ಮಹಿಳಾ ಸಂಘಗಳು ಸದುಪಯೋಗ ಪಡಿಸಿಕೊಳ್ಳಬೇಕು. ಸುತ್ತು ನಿಧಿಯನ್ನು ತಾಲ್ಲೂಕಿನ ಎಲ್ಲಾ ಸ್ತ್ರೀಶಕ್ತಿ ಗುಂಪುಗಳಿಗೂ ನೀಡಲಾಗಿದೆ. ಸಣ್ಣ ಉದ್ಯಮಗಳಲ್ಲಿ ತೊಡಗಿಸಿಕೊಂಡು ಉನ್ನತ ಸಾಧನೆ ಮಾಡಬೇಕೆಂದು ಹೇಳಿದರು.
ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶೀಲಮ್ಮ ಮಾತನಾಡಿ, ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಕಾರ್ಯಕ್ರಮ ಕಾಂಗ್ರೆಸ್ ಸರ್ಕಾರ ರೂಪಿಸಿದ್ದು, ಈ ನಿಟ್ಟಿನಲ್ಲಿ ಮಹಿಳಾ ಸಂಘಗಳು ರಚನಾತ್ಮಕವಾಗಿ ತೊಡಗಿಸಿ ಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಕಾಂಗ್ರೆಸ್ ಮುಖಂಡ ಸಿ.ತೋಪಯ್ಯ ಮಾತನಾಡಿ, ಭಾರ ತೀಯ ಸಮಾಜದಲ್ಲಿ ಮಹಿಳೆಗೆ ಉನ್ನತ ಸ್ಥಾನ ಕಲ್ಪಿಸಲಾಗಿದೆ. ಪುರಾಣದ ಕಾಲದಿಂದಲೂ ಮಹಿಳೆಯರ ಬಗ್ಗೆ ಹೆಚ್ಚಿನ ಗೌರವ ಹೊಂದಿರುವ ಸಂಸ್ಕೃತಿ ಪರಂಪರೆ ನಮ್ಮದಾಗಿದೆ.ಕಲೆ, ಸಾಹಿತ್ಯ, ಸಂಗೀತ, ಸಮಾಜ ಸೇವೆ, ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಮುನ್ನುಗ್ಗುವ ಛಾತಿಯನ್ನು ಬೆಳೆಸಿಕೊಳ್ಳ ಬೇಕು ಎಂದು ಅವರು ಕಿವಿಮಾತು ಹೇಳಿದರು.
ಮಹಿಳಾ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷೆ ಜಯಂತಿ ಭಗವಾನ್, ಅತ್ತಿಬೆಲೆ ಟೌನ್ ಕಾಂಗ್ರೆಸ್ ಅಧ್ಯಕ್ಷ ವೇಣು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಪ್ಪ, ಮುಖಂಡರಾದ ನಾಗವೇಣಿ, ಸುನಂದಾರೆಡ್ಡಿ, ಗೋಪಾಲಕೃಷ್ಣ, ರವಿ, ಛಲವಾದಿ ನಾಗರಾಜು, ತ್ರಿಪುರ ಸುಂದರಿ, ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ನಾಗಲೇಖ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.