ADVERTISEMENT

ಹೆಚ್ಚಿನ ಅಭಿವೃದ್ಧಿ ಕಾರ್ಯ: ಶಾಸಕ

ಕೊನಘಟ್ಟದ ಸರ್ಕಾರಿ ವಸತಿ ಕೇಂದ್ರಕ್ಕೆ ಶಂಕುಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2017, 8:58 IST
Last Updated 6 ಫೆಬ್ರುವರಿ 2017, 8:58 IST

ದೊಡ್ಡಬಳ್ಳಾಪುರ: ‘ತಾಲೂಕಿನಲ್ಲಿ ಈ ಹಿಂದೆಂದಿಗಿಂತಲೂ ಹೆಚ್ಚಿನ ಅಭಿವೃದ್ದಿ ಕಾರ್ಯಗಳಾಗುತ್ತಿದ್ದು, ₹ 2 ಸಾವಿರ ಕೋಟಿ ಕಾಮಗಾರಿಗಳು ನಡೆಯುತ್ತಿವೆ. ವಿರೋಧ ಪಕ್ಷಗಳ ಟೀಕೆ ಅರ್ಥಹೀನ,  ನಾವು ಯಾವುದೇ ಚರ್ಚೆಗೆ ಸಿದ್ದ ’ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ತಾಲೂಕಿನ ಕೊನಘಟ್ಟದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ನಿರ್ಮಾಣವಾಗಲಿರುವ ₹ 1.35 ಕೋಟಿ ವೆಚ್ಚದ ವಸತಿ ಸಮುಚ್ಛಯದ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಒತ್ತು ನೀಡಲಾಗುತ್ತಿದ್ದು, ಬಹಳ ದಿನಗಳ ನಿರೀಕ್ಷೆಯ ತಾಯಿ ಮಗು ಆಸ್ಪತ್ರೆ ₹ 12 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ತಾಲೂಕಿನಲ್ಲಿ ಹಿಂದೆಂದೂ ಇಲ್ಲದ 12 ಸಾವಿರ ಮನೆಗಳು ಈ ಬಾರಿ ಮಂಜೂರಾಗಿದೆ ಎಂದರು. ಕಡ್ಡಿಪುಡಿ ಕಾರ್ಖಾನೆಯಿಂದ ಕೊನಘಟ್ಟಕ್ಕೆ ₹ 3.5 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣವಾಗಲಿದೆ ಎಂದರು.

ತಾ.ಪಂ. ಉಪಾಧ್ಯಕ್ಷೆ ಮೀನಾಕ್ಷಿ ಕೆಂಪಣ್ಣ, ತಾ.ಪಂ. ಸದಸ್ಯರಾದ ನಾರಾಯಣಗೌಡ, ಹಸನ್‍ಘಟ್ಟ ರವಿ, ತಾಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಜಿ.ಲಕ್ಷ್ಮೀಪತಿ, ಕೊನಘಟ್ಟ ಗ್ರಾ.ಪಂ ಉಪಾಧ್ಯಕ್ಷೆ ಭಾಗ್ಯಮ್ಮ, ಸದಸ್ಯರಾದ ಎಂ.ನಾರಾಯಣಸ್ವಾಮಿ, ಮುನಿರತ್ನಮ್ಮ, ಬಸವರಾಜಯ್ಯ, ಲಕ್ಷ್ಮಮ್ಮ, ಶಶಿಕಲಾ ಮತ್ತಿತರರು ಭಾಗವಹಿಸಿದ್ದರು.

ವಾರ್ಷಿಕೋತ್ಸವ: ಕೊನಘಟ್ಟ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಕಾಲೇಜು ಆವರಣದಲ್ಲಿ ನಡೆಯಿತು.
ಸಮಾರಂಭವನ್ನು ಉದ್ಘಾಟಿಸಿದ ಶಾಸಕ ಟಿ.ವೆಂಕಟರಮಣಯ್ಯ, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ನಾರಾಯಣಗೌಡ, ಕಾಲೇಜಿನ ಪ್ರಾಂಶುಪಾಲ ಎನ್.ಸಿ.ಶಿವಣ್ಣ ಪಾಲ್ಗೊಂಡಿದ್ದರು.

ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಉಪನ್ಯಾಸಕಿ ಮಂಜುಳ ಅವರನ್ನು ಅಭಿನಂದಿಸಿ ಬೀಳ್ಕೊಡಲಾಯಿತು. ಕಳೆದ ಬಾರಿ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿ ಲೀಲಾವತಿ ಅವರನ್ನು ಅಭಿನಂದಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.