ADVERTISEMENT

28ಕ್ಕೆ ಅಂಬೇಡ್ಕರ್‌ ಭವನ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2017, 10:33 IST
Last Updated 3 ಜುಲೈ 2017, 10:33 IST

ದೇವನಹಳ್ಳಿ: ‘ಸುಸಜ್ಜಿತವಾಗಿ ನಿರ್ಮಾಣ ಮಾಡಿರುವ ಡಾ.ಬಿ.ಆರ್‌. ಅಂಬೇಡ್ಕರ್‌ ಭವನವನ್ನು ಇದೇ 28 ರಂದು ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ’ ಎಂದು  ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಸವರಾಜ್‌ ತಿಳಿಸಿದರು. ಇಲ್ಲಿ ನಿರ್ಮಿಸಿರುವ  ಡಾ. ಅಂಬೇಡ್ಕರ್‌ ಭವನಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿ, ಕಾಮಗಾರಿ ವಿಳಂಬಕ್ಕೆ ಕಾರಣದ ಬಗ್ಗೆ ವಿವರಣೆ ನೀಡಿದರು. ಒಂದೇ ಇಲಾಖೆಯಿಂದ ಇದಕ್ಕೆ ಅನುದಾನ ಬಂದಿಲ್ಲ ಎಂದರು.
ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಭಿವೃದ್ಧಿ ಪ್ರಾಧಿಕಾರ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ನಾಲ್ಕು ಹಂತದಲ್ಲಿ ₹ 9 ಕೋಟಿ ವೆಚ್ಚದಲ್ಲಿ ಭವ್ಯ ಭವನ ನಿರ್ಮಾಣಗೊಂಡಿದೆ ಎಂದರು.

ಭವನದ ಸುತ್ತ ಕಾಂಪೌಂಡ್‌ ನಿರ್ಮಾಣ ಹಾಗೂ  ಗ್ರಿಲ್‌ ಅಳವಡಿಸಬೇಕಾಗಿದೆ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಲಾಖೆವಾರು ಸಚಿವರು ಅಂಬೇಡ್ಕರ್‌ ಕಂಚಿನ ಪ್ರತಿಮೆ, ಪ್ರವಾಸಿ ಮಂದಿರದಲ್ಲಿ ನಿರ್ಮಾಣ ಮಾಡಲಾಗಿರುವ ನೂತನ ಸರ್ಕ್ಯೂಟ್‌ ಹೌಸ್‌, ಅಗ್ನಿಶಾಮಕ ಠಾಣೆ ಅಧಿಕೃತವಾಗಿ ಲೋಕಾರ್ಪಣೆ ಮಾಡಲಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.

ADVERTISEMENT

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರೇಮನಾಥ್‌ ಮಾತನಾಡಿ, ಭವನ ನಿರ್ಮಾಣಕ್ಕೆ ಆರಂಭದ ಯೋಜನೆ ಮೂರು ಕೋಟಿ ಮಾತ್ರ ಇತ್ತು. ದೇವನಹಳ್ಳಿ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಿದ ನಂತರ ಶಾಸಕರ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರ ಹಾಗೂ ದಲಿತ ಮುಖಂಡರ ಒತ್ತಾಯದ  ಮೇರೆಗೆ ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲಾಯಿತು.

ಪರಿಣಾಮ ಇದೊಂದು ಹೈಟೆಕ್‌ ಭವನ ನಿರ್ಮಾಣವಾಗಿದೆ ಎಂದು ಹೇಳಿದರು. ತಹಶೀಲ್ದಾರ್‌ ಜಿ.ಎ. ನಾರಾ ಯಣಸ್ವಾಮಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚನ್ನಬಸಪ್ಪ, ಲೋಕೋಪ ಯೋಗಿ ಇಲಾಖೆ ಸಹಾಯಕ ಎಂಜಿನಿಯರ್‌ ಎನ್. ಕೃಷ್ಣಪ್ಪ ಮತ್ತು ದಲಿತ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.