ADVERTISEMENT

ನೀರಿಗೆ ಆಗ್ರಹಿಸಿ ಕೊಡಗಳ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 27 ಜುಲೈ 2017, 6:12 IST
Last Updated 27 ಜುಲೈ 2017, 6:12 IST

ಚಿಕ್ಕೋಡಿ: ತಾಲ್ಲೂಕಿನ ಬಂಬಲವಾಡ ಗ್ರಾಮದಲ್ಲಿ ಮಹಿಳೆಯರು ಶಾಸಕ ಡಿ.ಎಂ.ಐಹೊಳೆ ಅವರೆದುರು ಖಾಲಿ ಕೊಡಗಳನ್ನು ಪ್ರದರ್ಶಿಸಿ ಕುಡಿಯುವ ನೀರನ್ನು ಸಮರ್ಪಕವಾಗಿ ಸರಬರಾಜು ಮಾಡುವಂತೆ ಬುಧವಾರ ಆಗ್ರಹಪಡಿಸಿದರು.

ಕುಂಗಟೋಳಿಯಿಂದ ಬೆಣ್ಣಿಹಳ್ಳಿ ಗ್ರಾಮದವರೆಗಿನ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲು ತೆರಳುತ್ತಿದ್ದ ಶಾಸಕ ಐಹೊಳೆ ಅವರನ್ನು ಮಹಿಳೆಯರು ಬಂಬಲವಾಡದಲ್ಲಿ ತಡೆದರು. ‘ಗ್ರಾಮದಲ್ಲಿ ಕುಡಿಯುವ ನೀರಿನ ಸರಬರಾಜು ನಿಯಮಿತವಾಗಿ ಆಗುತ್ತಿಲ್ಲ. ಕಳೆದೊಂದು ವಾರದಿಂದ ತಾಲ್ಲೂಕು ಆಡಳಿತ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸರಬರಾಜು ಮಾಡುತ್ತಿಲ್ಲ’ ಎಂದು ದೂರಿದರು.

ಗ್ರಾಮದಲ್ಲಿನ ಜಲಮೂಲಗಳೂ ಬತ್ತುತ್ತಿವೆ. ಜನ ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಹನಿ ನೀರಿಗಾಗಿ ಪರದಾಡುವ ಸ್ಥಿತಿ ಬಂದೊದಗಿದೆ. ಗ್ರಾಮದಲ್ಲಿ ಕುಡಿಯುವ ನೀರನ್ನು ಸಮರ್ಪಕವಾಗಿ ಸರಬರಾಜು ಮಾಡಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ತಾಲ್ಲೂಕು ಆಡಳಿತದಿಂದ ಗ್ರಾಮಕ್ಕೆ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಅಲ್ಲದೇ, ಬರುವ ಎರಡು ದಿನಗಳಲ್ಲಿ ಬೋರವೆಲ್‌ ಕೊರೆಸಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುತ್ತೇನೆ’ ಎಂದು ಶಾಸಕ ಐಹೊಳೆ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.