ADVERTISEMENT

ಬೀದಿನಾಯಿಗಳ ಕಡಿತದಿಂದ ಸಾವು: ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2017, 10:25 IST
Last Updated 16 ಏಪ್ರಿಲ್ 2017, 10:25 IST

ಬೈಲಹೊಂಗಲ: ‘ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಸಾವಿಗೀಡಾದ ಬಡ ಕುಟುಂಬದ ವ್ಯಕ್ತಿ ಹಸನ್ ಇಮಾಮಸಾಬ ಕಿತ್ತೂರು (34) ಈತನಿಗೆ ಸೂಕ್ತ ಪರಿಹಾರ ಧನ ನೀಡಬೇಕು’ ಎಂದು ಒತ್ತಾಯಿಸಿ ಮೃತ ವ್ಯಕ್ತಿಯ ಕುಟುಂಬಸ್ಥರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಧರಣಿ ನಡೆಸಿದರು.
ಉಪವಿಭಾಗಾಧಿಕಾರಿ ಕಚೇರಿ ಎದುರು ಶನಿವಾರ ಎರಡು ಗಂಟೆ ಧರಣಿ ನಡೆಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಸ್ಥಳಕ್ಕೆ ಸಚಿವರು, ಶಾಸಕರು, ಅಧಿಕಾರಿಗಳು ಬರುವವರೆಗೆ  ಕದಲುವುದಿಲ್ಲ ಎಂದು ಪಟ್ಟು ಹಿಡಿದರು.

ಸಣ್ಣ ಕೈಗಾರಿಕೆ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಶಾಸಕ ಡಾ.ವಿಶ್ವನಾಥ ಪಾಟೀಲ, ಮಾಜಿ ಶಾಸಕ ಮಹಾಂತೇಶ ಕೌಜಲಗಿ, ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ಪುರಸಭೆ ಅಧ್ಯಕ್ಷ ರಾಜು ಜನ್ಮಟ್ಟಿ, ಪುರಸಭೆ ಮುಖ್ಯಾಧಿಕಾರಿ ಶಿವಪ್ಪ ಅಂಬಿಗೇರ ಧರಣಿ ನಡೆಯುತ್ತಿದ್ದ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿದರು.
‘ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ಮಕ್ಕಳು, ವಯಸ್ಕರ ಮೇಲೆ ನಾಯಿಗಳು ಹಾನಿ ಮಾಡುತ್ತಿದ್ದರೂ ಸಂಬಂಧಪಟ್ಟ ಪುರಸಭೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಬೀದಿ ನಾಯಿಗಳ ಹಾವಳಿ ನಿಯಂತ್ರಿಸಿ ಎಂದು ಸಾಕಷ್ಟು ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ.’ ಎಂದು ಪ್ರತಿಭಟನಾಕಾರರು ತಿಳಿಸಿದರು.

ಸಮಸ್ಯೆ ಆಲಿಸಿದ ಸಚಿವರು, ‘ಘಟನೆಯಿಂದ ಮನಸ್ಸಿಗೆ ನೋವಾಗಿದೆ. ಮೃತರ ಕುಟುಂಬದ ನೆರವಿಗೆ ಸರ್ಕಾರ, ಜನಪ್ರತಿನಿಧಿಗಳು ಇದ್ದಾರೆ. ಸಂಬಂಧಪಟ್ಟ ಇಲಾಖೆ ಮೂಲಕ ಧನಸಹಾಯ ಕಲ್ಪಿಸಿಕೊಡಲಾಗುತ್ತದೆ’ ಎಂದು ಭರವಸೆ ನೀಡಿದರು. ಆಗ ಧರಣಿ ನಿರತರು ಪ್ರತಿಭಟನೆ ಹಿಂಪಡೆದರು.ಮೃತ ವ್ಯಕ್ತಿಯ ಪತ್ನಿ ಪೀರದೋಸ್, ಮೂರು ಜನ ಮಕ್ಕಳು, ಅತ್ತೆ ಮೆಹಬುಮಾ, ರೋಹಾನಾ, ಬುನೇರಾ, ಪ್ರಭಾಕರ ಭಜಂತ್ರಿ, ಅಬ್ದುಲ್ ರೆಹಮಾನ, ಆಟೋ ಚಾಲಕ ಮತ್ತು ಮಾಲಿಕರ ಸಂಘದ ಪದಾಧಿಕಾರಿಗಳು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.