ADVERTISEMENT

ಬೆಳಗಾವಿ ಅಧಿವೇಶನ ಜಾತ್ರೆಯಿದ್ದಂತೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2017, 6:18 IST
Last Updated 27 ನವೆಂಬರ್ 2017, 6:18 IST

ಗೋಕಾಕ: ಉತ್ತರ ಕರ್ನಾಟಕ ಭಾಗದ ಜನತೆಯ ಆಶೋತ್ತರಗಳಿಗೆ ಪೂರಕವಾಗಿ ನಿರ್ಮಿಸಿರುವ ಬೆಳಗಾವಿಯ ಸುವರ್ಣಸೌಧದಲ್ಲಿ ಪ್ರತಿವರ್ಷ ನಡೆಯುತ್ತಿರುವ ವಿಧಾನಸಬೆ ಅಧಿವೇಶವನ ತನ್ನ ಸಾಫಲ್ಯತೆಯನ್ನು ಕಾಣುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಅದು ವರ್ಷಕ್ಕೊಮ್ಮೆ ಪ್ರತಿ ಗ್ರಾಮಗಳಲ್ಲಿ ನಡೆಯುವ ಜಾತ್ರೆಗಳಂತಾಗಿದೆ ಎಂದು ಬಿ.ಜೆ.ಪಿ. ಮುಖಂಡ ಅಶೋಕ ಪೂಜಾರಿ ಹೇಳಿದ್ದಾರೆ.

ಭಾನುವಾರ ಈ ಕುರಿತು ಪತ್ರಿಕಾ ಪ್ರಕಟಣೆ ನೀಡುವ ಮೂಲಕ ತಮ್ಮ ಅನಿಸಿಕೆ ವ್ಯಕ್ತಪಡಿಸಿರುವ ಅವರು, ಸುವರ್ಣಸೌಧದಲ್ಲಿ ನಡೆಯುವ ವಿಧಾನಸಭೆ ಅಧಿವೇಶನ ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುವ ವಿಧಾನಸಭೆ ಅಧಿವೇಶನದಂತೆ ತನ್ನದೇ ಆದ ಗಾಂಭಿರ್ಯತೆಯನ್ನು ಹೊಂದಬೇಕು.

ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರುಗಳು ಹಾಗೂ ಮಂತ್ರಿಮಂಡಳದ ಸದಸ್ಯರುಗಳು ಹಾಗೂ ಅಧಿಕಾರಿಗಳು ಅದೇ ಗಾಂಭೀರ್ಯತೆಯಿಂದ ಇದರಲ್ಲಿ ಪಾಲ್ಗೊಳ್ಳುವಂತಾಗಬೇಕು.

ADVERTISEMENT

ಆದರೆ ಇತ್ತಿಚೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಬಹುತೇಕ ಶಾಸಕರುಗಳ ಅನುಪಸ್ಥಿತಿ ಎದ್ದುಕಾಣುತ್ತಿದೆ. ಹತ್ತು ದಿನಗಳ ಅಧಿವೇಶನದಲ್ಲಿ ಜಾತ್ರೆಗಳ ರೀತಿಯಲ್ಲಿ ಊಟ ತಯಾರಿಸುವುದು ಮತ್ತು ಸಾಮೂಹಿಕ ಊಟ ಬಡಿಸುವುದನ್ನು ನೋಡಿದರೆ ಇದು ಜಾತ್ರೆಯೆನೋ ಎಂಬ ಅನುಮಾನ ಮೂಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಬೆಳಗಾವಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಗಂಭೀರವಾದ ಚರ್ಚೆ ನಡೆಯಬಹುದೆಂದು ಜನಸಾಮಾನ್ಯರ ಊಹೆಯಾಗಿತ್ತು. ಉತ್ತರ ಕರ್ನಾಟಕ ಭಾಗದ ವಿಷಯಗಳ ಚರ್ಚೆಯಲ್ಲಿ ಉತ್ತರ ಕರ್ನಾಟಕ ಭಾಗದ ಶಾಸಕರುಗಳೇ ಭಾಗವಹಿಸದಿದ್ದರೆ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಯ ಬಗ್ಗೆ ಯೋಚಿಸುವುದಾದರೂ ಹೇಗೆ ? ಎಂದು ಪ್ರಶ್ನಿಸಿರುವ ಅವರು, ಮುಂದಿನ ದಿನಗಳಲ್ಲಾದರೂ ಉತ್ತರ ಕರ್ನಾಟಕ ಭಾಗದ ಶಾಸಕರುಗಳು ಈ ಕುರಿತು ಆತ್ಮ ವಿಮರ್ಶೆ ಮಾಡಿಕೊಳ್ಳುವುದು ಅವಶ್ಯಕವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.