ADVERTISEMENT

‘ರೈತರನ್ನು ಕಡೆಗಣಿಸಿದ ರಾಷ್ಟ್ರೀಯ ಪಕ್ಷಗಳು’

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2017, 8:27 IST
Last Updated 2 ಡಿಸೆಂಬರ್ 2017, 8:27 IST
ರೈತ ಸೇನೆಯ ಮುಖಂಡರ ನೇತೃತ್ವದಲ್ಲಿ ರಾಮದುರ್ಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಅರ್ಪಿಸಲಾಯಿತು
ರೈತ ಸೇನೆಯ ಮುಖಂಡರ ನೇತೃತ್ವದಲ್ಲಿ ರಾಮದುರ್ಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಅರ್ಪಿಸಲಾಯಿತು   

ರಾಮದುರ್ಗ: ಮಹದಾಯಿ ಮತ್ತು ಕಳಸಾ ಬಂಡೂರಿ ಸಮಸ್ಯೆಗೆ ಪರಿಹಾರ ಕಲ್ಪಿಸುವಲ್ಲಿ ಉಭಯ ರಾಷ್ಟ್ರೀಯ ಪಕ್ಷಗಳ ಮುಖಂಡರು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ  ರೈತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಅರ್ಪಿಸಿದರು.

ಇಲ್ಲಿನ ಶ್ರೀ ವೆಂಕಟೇಶ್ವರ ದೇವಸ್ಥಾನದಿಂದ ರೈತ ಸೇನೆಯ ನೇತೃತ್ವದಲ್ಲಿ ಮೆರವಣಿಗೆ ಹೊರಟ ರೈತರು, ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ಇಲ್ಲಿನ ಹುತಾತ್ಮ ಚೌಕ್‌ನಲ್ಲಿ ನಡೆದ ಸಮಾವೇಶದಲ್ಲಿ ರೈತ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ವಿರೇಶ ಸೊಬರದಮಠ ಸ್ವಾಮೀಜಿ ಮಾತನಾಡಿ, ಮಹದಾಯಿ ಮತ್ತು ಕಳಸಾ ಬಂಡೂರಿ ನದಿ ಜೋಡನೆಗೆ ಆಗ್ರಹಿಸಿ ಸುಮಾರು 868 ದಿನಗಳಿಂದ ಹೋರಾಟ ಮಾಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ADVERTISEMENT

ರೈತರನ್ನು ರಾಷ್ಟ್ರೀಯ ಪಕ್ಷಗಳು ಕಡೆಗಣಿಸುತ್ತಿವೆ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ನಿವಾಸದ ಎದುರಿಗೆ ರೈತರು ಆಹೋರಾತ್ರಿ ಧರಣಿ ನಡೆಸುತ್ತಿರುವ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಮುಖಂಡರು ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರು ಡಿಸೆಂಬರ-15 ರೊಳಗಾಗಿ ಮಹದಾಯಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ಭರವಸೆ ಹುಸಿಯಾದಲ್ಲಿ ರೈತರು ಬಿಜೆಪಿ ಮುಖಂಡರ ಮನೆ ಎದುರು ವಿಷ ಸೇವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ರೈತ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್. ಪಾಟೀಲ ಮಾತನಾಡಿ, ರೈತರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರೂ ಸಮಸ್ಯೆಗೆ ಸ್ಪಂಧಿಸದೇ ಇರುವ ರಾಷ್ಟ್ರೀಯ ಪಕ್ಷಗಳ ಮುಖಂಡರ ಕ್ರಮ ಖಂಡನೀಯ ಎಂದು ಗುಡುಗಿದರು.

ಯೋಜನೆ ಜಾರಿಗೆ ರಾಜ್ಯದ ಮುಖ್ಯಮಂತ್ರಿಗಳು ಮತ್ತೊಮ್ಮೆ ಸರ್ವಪಕ್ಷಗಳ ಮುಖಂಡರು ನಿಯೋಗದೊಂದಿಗೆ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿಬೇಕು.  ಹೋರಾಟದ ಸಂದರ್ಭದಲ್ಲಿ ರೈತರ ಮೇಲೆ ಹಾಕಲಾದ ಕೇಸುಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ರೈತ ಸೇನೆಯ ರಾಜ್ಯ ಉಪಾಧ್ಯಕ್ಷ ಶಂಕರ ಅಂಬಲಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಹಣಮಂತ ಮಡಿವಾಳರ, ಜಿಲ್ಲಾ ಸಂಚಾಲಕ ಶಂಕರಗೌಡ ಪಾಟೀಲ, ತಾಲ್ಲೂಕು ಗೌರವಾಧ್ಯಕ್ಷ ಬಾಳಪ್ಪ ರಡರಟ್ಟಿ, ಶಹರ ಘಟಕದ ಅಧ್ಯಕ್ಷ ವೆಂಕಟೇಶ ಹಿರೇರಡ್ಡಿ, ಡಿ.ಎಫ್. ಹಾಜಿ, ಗೋಪಾಲಗೌಡ ಪಾಟೀಲ, ಬಾಳಪ್ಪ ಚುಂಚನೂರ, ಎಸ್.ಸಿ. ಹಿರೇಮಠ, ಬಸಪ್ಪ ಕುರಬಗಟ್ಟಿ, ಮಹಾಂತೇಶ ಹಾವಣ್ಣಿ, ಮಲ್ಲಪ್ಪ ಹಾದಿಮನಿ, ಮಾಯಪ್ಪ ಒಡೇಕನವರ, ಮಹಾದೇವಿ ಫರಾಳಶೆಟ್ಟಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.