ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ 18 ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಳು ಕನಿಷ್ಠ 13 ಸ್ಥಾನಗಳನ್ನು ಗೆಲ್ಲಬೇಕು. ಇದಕ್ಕಾಗಿ ಮುಖಂಡರು,ಕಾರ್ಯಕರ್ತರು ಸಂಕಲ್ಪ ತೊಡಬೇಕು ಎಂದು ಪಕ್ಷದ ಬೆಳಗಾವಿ ವಿಭಾಗದ ಉಸ್ತುವಾರಿ ಮತ್ತು ಎಐಸಿಸಿ ಕಾರ್ಯದರ್ಶಿ ಮಾಣಿಕ್ ಟಾಗೂರ್ ಸೂಚಿಸಿದರು.
ಪಕ್ಷದ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಬಲಿಷ್ಠವಾಗಬೇಕು. ಇದಕ್ಕಾಗಿ ಜಿಲ್ಲೆಯ ನಾಯಕರು ಒಗ್ಗಟ್ಟಾಗಬೇಕು’ ಎಂದು ತಿಳಿಸಿದರು.
‘ಬೆಳಗಾವಿ ಅತಿ ದೊಡ್ಡ ಜಿಲ್ಲೆಯಾ ಗಿದ್ದು, ಕಾಂಗ್ರೆಸ್ನ ಭದ್ರಕೋಟೆ ಆಗ ಬೇಕು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಬಲಪಡಿಸಬೇಕು’ ಎಂದು ಸಲಹೆ ನೀಡಿದರು.
ಸಚಿವ ರಮೇಶ ಜಾರಕಿಹೊಳಿ, ಶಾಸಕ ರಾದ ಸತೀಶ ಜಾರಕಿಹೊಳಿ, ಶಾಸಕ ಫಿರೋಜ್ ಸೇಠ್, ಅಶೋಕ ಪಟ್ಟಣ, ಗಣೇಶ ಹುಕ್ಕೇರಿ, ವಿಧಾನಪರಿಷತ್ ಸದಸ್ಯ ವಿವೇಕರಾವ ಪಾಟೀಲ, ಕೆಪಿಸಿಸಿ ಮಹಿಳಾ ವಿಭಾಗದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ್, ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ನಗರ ಘಟಕದ ಅಧ್ಯಕ್ಷ ರಾಜು ಸೇಠ್ ಅವರು ಟಾಗೋರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಮುಂಬರುವ ಚುನಾವಣೆ ಕುರಿತು ಹಾಗೂ ಟಿಕೆಟ್ ಹಂಚಿಕೆ ಕುರಿತು ಟಾಗೂರ್ ಚರ್ಚಿಸಿದರು ಎನ್ನಲಾಗಿದೆ.
ನಗರಕ್ಕೆ ಇಂದು ದಿನೇಶ್ ಭೇಟಿ
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಶನಿವಾರ ನಗರಕ್ಕೆ ಆಗಮಿಸಲಿದ್ದು, ಮುಂಬರುವ ಚುನಾವಣೆ ಹಾಗೂ ಜಿಲ್ಲೆಯ ರಾಜಕೀಯ ಬೆಳವಣಿಗೆ ಕುರಿತು ಪಕ್ಷದ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.