ಬೆಂಗಳೂರು: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷಾ ಅಕ್ರಮ ಎಸಗಲು ಸಹಾಯ ಮಾಡಿದ ಆರೋಪದ ಮೇಲೆ ಬೀದರಿನ ನೂರ್ಜಾನ್ ಕಾಲೇಜಿನ ಪ್ರಾಂಶುಪಾಲ ಹಾಗೂ ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಶಿಖಾ, ‘ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಿಬ್ಬಂದಿ ಸಹಾಯ ಮಾಡುತ್ತಿದ್ದ ವಿಚಾರ ಇಲಾಖೆ ಗಮನಕ್ಕೆ ಬಂದಿದೆ. ಹಾಗಾಗಿ ಪ್ರಾಂಶುಪಾಲ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದರು.
‘ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿರುವ ಸಿ.ಸಿ ಟಿ.ವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪಡೆಯಲು ಅಲ್ಲಿನ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದು ಎಂದು ಪರೀಕ್ಷಾ ಕೇಂದ್ರ ಬದಲಾಯಿಸಿಲ್ಲ. ಆದರೆ, ಪರೀಕ್ಷಾ ಕೇಂದ್ರದಲ್ಲಿ ಇದ್ದ ಸಿಬ್ಬಂದಿಯನ್ನು ಬದಲಿಸಿದ್ದೇವೆ’ ಎಂದು ತಿಳಿಸಿದರು.
‘ನಕಲು ಮಾಡಲು ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಸಿಬ್ಬಂದಿ ಸಹಾಯ ಮಾಡುತ್ತಿದ್ದ ದೃಶ್ಯಾವಳಿಗಳು ಸೆರೆಯಾಗಿದ್ದವು. ಇದನ್ನು ಆಧಾರವಾಗಿಟ್ಟುಕೊಂಡು ಕ್ರಮ ಕೈಕೊಳ್ಳಲಾಗಿದೆ. ಮತ್ತೊಮ್ಮೆ ಈ ರೀತಿಯಾಗದಂತೆ ಎಚ್ಚರ ವಹಿಸಲಾಗುವುದು’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.