ADVERTISEMENT

ಅನಿಲ್‌ ಲಾಡ್‌ ವಿರುದ್ಧದ ವಿಚಾರಣೆಗೆ ತಡೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2017, 20:29 IST
Last Updated 24 ಏಪ್ರಿಲ್ 2017, 20:29 IST
ಅನಿಲ್‌ ಲಾಡ್‌
ಅನಿಲ್‌ ಲಾಡ್‌   

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಕಾನೂನು ಬಾಹಿರವಾಗಿ ಅದಿರು ಸಾಗಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಅನಿಲ್‌ ಲಾಡ್ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ಸೋಮವಾರ ತಡೆ ನೀಡಿದೆ.

ಪ್ರಕರಣ ರದ್ದಪಡಿಸಬೇಕು ಎಂದು ಕೋರಿ ಅನಿಲ್‌ ಲಾಡ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸಿಬಿಐ ಪರ ವಕೀಲ ಪಿ. ಪ್ರಸನ್ನ ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿತು.

ಅರ್ಜಿದಾರರ ವಕೀಲ ಹಸ್ಮತ್ ಪಾಷಾ, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ವಿಎಸ್‌ಎಲ್‌ ಗಣಿಗಾರಿಕೆ ಕಂಪೆನಿಯ ವಿರುದ್ಧ ಮೊದಲು ದಾಖಲಿಸಿದ್ದ ಆರೋಪ ಪಟ್ಟಿಯಲ್ಲಿ  ಅನಿಲ್‌ ಲಾಡ್ ಹೆಸರು ಇರಲಿಲ್ಲ. ಹೆಚ್ಚುವರಿ ಆರೋಪಪಟ್ಟಿಯಲ್ಲಿ ಅವರನ್ನು 19ನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಈ ಪ್ರಕರಣದಲ್ಲಿ ಅವರು ಭಾಗಿಯಾಗಿರುವ ಕುರಿತು ಸೂಕ್ತ ದಾಖಲೆಗಳಿಲ್ಲ’ ಎಂದರು.

ಆರೋಪ ಏನು?: ‘ವಿಎಸ್‌ಎಲ್‌ ಗಣಿಗಾರಿಕೆ ಕಂಪೆನಿಯು 2003ರಿಂದ 2011ರ ಅವಧಿಯಲ್ಲಿ ಪರವಾನಗಿ ಇಲ್ಲದೆ ಮಲ್ಲಿಕಾರ್ಜುನ ಶಿಪ್ಪಿಂಗ್‌ ಪ್ರೈವೇಟ್‌ ಲಿಮಿಟೆಡ್‌ ಕಂಪೆನಿಗೆ 14,342 ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಮಾರಾಟ ಮಾಡಿದೆ’ ಎಂಬುದು ಆರೋಪ. ಅನಿಲ್‌ ಲಾಡ್‌ ವಿಎಸ್‌ಎಲ್‌ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರೂ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.