ADVERTISEMENT

‘ಉತ್ತರ’ ಗೆಲುವು: ನೇತಾರರ ಭಿನ್ನ ನಿಲುವು

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2017, 19:59 IST
Last Updated 11 ಮಾರ್ಚ್ 2017, 19:59 IST
ಉತ್ತರ ಪ್ರದೇಶ ಮತ್ತು ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದರಿಂದ ಶನಿವಾರ ಬೆಂಗಳೂರಿನಲ್ಲಿರುವ ಪಕ್ಷದ ರಾಜ್ಯ ಕಚೇರಿ ಎದುರು ಕಾರ್ಯಕರ್ತರು ಸಂಭ್ರಮಿಸಿದರು – ಪ್ರಜಾವಾಣಿ ಚಿತ್ರ
ಉತ್ತರ ಪ್ರದೇಶ ಮತ್ತು ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದರಿಂದ ಶನಿವಾರ ಬೆಂಗಳೂರಿನಲ್ಲಿರುವ ಪಕ್ಷದ ರಾಜ್ಯ ಕಚೇರಿ ಎದುರು ಕಾರ್ಯಕರ್ತರು ಸಂಭ್ರಮಿಸಿದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಮುಂದಿನ ವರ್ಷ ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಕುರಿತು ರಾಜಕೀಯ ನೇತಾರರು ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಆಡಳಿತ ಇರುವ ಪ್ರಮುಖ ರಾಜ್ಯವಾದ ಕರ್ನಾಟಕದಲ್ಲಿ 2018ರ ಏಪ್ರಿಲ್‌–ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ದಕ್ಷಿಣ ರಾಜ್ಯಗಳ ಹೆಬ್ಬಾಗಿಲು ಕರ್ನಾಟಕ ಎಂದು ಭಾವಿಸಿರುವ ಬಿಜೆಪಿ, ಇಲ್ಲಿ ಮರಳಿ ಅಧಿಕಾರ ಹಿಡಿಯಲು ಸಿದ್ಧತೆ ನಡೆಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಪಕ್ಷದ ರಾಜ್ಯ ಘಟಕಕ್ಕೆ ಈಗಾಗಲೇ ಮಿಷನ್‌–150ರ ಗುರಿ ನೀಡಿದ್ದಾರೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ಯಾವುದೇ ವಿಧಾನಸಭೆ ಚುನಾವಣೆಗೂ ಮುನ್ನ  ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಜೆಪಿ ಘೋಷಿಸಿರಲಿಲ್ಲ. ಕರ್ನಾಟಕದಲ್ಲಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಷಾ ಈಗಾಗಲೇ ಘೋಷಿಸಿದ್ದಾರೆ.

ADVERTISEMENT

ಬಿಜೆಪಿಯಲ್ಲಿ ನಾಯಕತ್ವದ ಗೊಂದಲ ಇಲ್ಲದೆ ಇದ್ದರೂ ಭಿನ್ನಮತ ಇದೆ. ಆದರೆ, ಕಾಂಗ್ರೆಸ್‌ನಲ್ಲಿ ಯಾರ ನೇತೃತ್ವದಲ್ಲಿ ಚುನಾವಣೆಗೆ ಹೋಗಬೇಕು ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗಲಿದೆಯೆ ಎಂಬುದು ಇತ್ಯರ್ಥವಾಗಿಲ್ಲ.  ಜೆಡಿಎಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಲಾಗಿದೆ. ಉತ್ತರ ಪ್ರದೇಶದ ಫಲಿತಾಂಶ ಮುಂದೆ ನಡೆಯಲಿರುವ ಕರ್ನಾಟಕದ ಚುನಾವಣೆಯ ಮೇಲೆ ಬೀರಬಹುದಾದ ಪರಿಣಾಮಗಳ ಕುರಿತು ನಾಯಕರ ಅಭಿಪ್ರಾಯ ಇಲ್ಲಿದೆ.

ನಾಯಕರ ಅಭಿಮತ: ‘ಉತ್ತರ ಪ್ರದೇಶದಲ್ಲಿ ಅಖಿಲೇಶ್  ಯಾದವ್‌ ಉತ್ತಮ ಆಡಳಿತ ನೀಡಿದ್ದರು. ಆದರೂ ಆಡಳಿತ ವಿರೋಧಿ ಅಲೆ, ಯಾದವ್‌ ಕುಟುಂಬದ ಒಳಜಗಳದಿಂದ ಮೈತ್ರಿಕೂಟಕ್ಕೆ ಸೋಲಾಗಿದೆ. ರಾಜ್ಯದಲ್ಲಿ ಬಿಜೆಪಿ ಅಲೆ ಇದೆ ಎಂಬುದೆಲ್ಲಾ ಸುಳ್ಳು. ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿಯವರು ಮಾಡಿದ ಪಾಪದ ಕೆಲಸವನ್ನು ರಾಜ್ಯದ ಜನ ಇನ್ನೂ ಮರೆತಿಲ್ಲ’ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ಈ ಫಲಿತಾಂಶ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಉತ್ತರ ಪ್ರದೇಶ ಫಲಿತಾಂಶ ಬಿಜೆಪಿಗೆ ಲಾಭ ತಂದುಕೊಡುತ್ತದೆ ಎಂದಾದರೆ ಪಂಜಾಬ್‌ ಫಲಿತಾಂಶ ನಮಗೆ ನೆರವಾಗಬಹುದಲ್ಲವೇ’ ಎಂದೂ ಅವರು ಪ್ರಶ್ನಿಸಿದರು.

‘ರಾಜ್ಯದಲ್ಲಿ ನಡೆಯಲಿರುವ ಮುಂದಿನ ಚುನಾವಣೆಯಲ್ಲಿ  150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದಕ್ಕೆ ಈ ಫಲಿತಾಂಶ ದಿಕ್ಸೂಚಿಯಾಗಲಿದೆ. ಉತ್ತರಾಖಂಡ  ಹಾಗೂ ಉತ್ತರಪ್ರದೇಶದ ಸರ್ಕಾರಗಳ ಭ್ರಷ್ಟಾಚಾರಕ್ಕೆ ಹೋಲಿಸಿದರೆ ಸಿದ್ದರಾಮಯ್ಯ ಸರ್ಕಾರ ಹಗರಣಗಳ ಸರಮಾಲೆಯನ್ನೇ ಧರಿಸಿದೆ. ರಾಜ್ಯ ಸರ್ಕಾರದ ಅನೇಕ ಅಕ್ರಮಗಳ ದಾಖಲೆಗಳು ನಮ್ಮ ಬಳಿ ಇದೆ. ಅವೆಲ್ಲವನ್ನೂ ಬಯಲು ಮಾಡುತ್ತೇವೆ’ ಎಂದು ಯಡಿಯೂರಪ್ಪ ಪ್ರತಿಪಾದಿಸಿದ್ದಾರೆ.

ನಂಜನಗೂಡು ಮತ್ತು ಗುಂಡ್ಲುಪೇಟೆಯಲ್ಲಿ ಬಿಜೆಪಿ ಗೆಲ್ಲಲಿದೆ. ಹಣ, ಹೆಂಡ ಮತ್ತು  ತೋಳ್ಬಲದ ಮೇಲೆ ಗೆಲ್ಲುತ್ತೇವೆ ಎಂಬ ಉತ್ಸಾಹದಲ್ಲಿರುವ ಸಿದ್ದರಾಮಯ್ಯಗೆ ಜನ ಪಾಠ ಕಲಿಸುತ್ತಾರೆ ಎಂದರು.

ಇದಕ್ಕೆ ಭಿನ್ನವಾಗಿ ಪ್ರತಿಕ್ರಿಯೆ ನೀಡಿರುವ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ, ‘ಮೋದಿ ಅವರು ರೈತರ ಸಾಲಮನ್ನಾ ಮಾಡುವುದಾಗಿ ಉತ್ತರ ಪ್ರದೇಶ ಚುನಾವಣೆ ವೇಳೆ ಘೋಷಿಸಿದ್ದಾರೆ. ಇದಕ್ಕೆ ಪರ್ಯಾಯವಾಗಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಏನು ಘೋಷಿಸಲಿದ್ದಾರೆ ನೋಡೋಣ. ನಮ್ಮ ಪಕ್ಷ ಏನು ಮಾಡಲು ಸಾಧ್ಯ? ರೈತರ ಪರ ಹೋರಾಟ ಮುಂದುವರಿಸುತ್ತೇನೆ’ ಎಂದರು.

‘ಪ್ರಾದೇಶಿಕ ಪಕ್ಷಕ್ಕೆ ನೆಲೆ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರಲ್ಲ’ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ, ‘ಆ ಬಗ್ಗೆ ಈಗಲೇ ಪ್ರತಿಕ್ರಿಯಿಸುವುದಿಲ್ಲ. ರಾಜ್ಯದ ಜನರು ಅದನ್ನು ತೀರ್ಮಾನಿಸುತ್ತಾರೆ. ನಮ್ಮನ್ನು ನಿರ್ನಾಮ ಮಾಡಲು ಯಾರಿಂದಲೂ ಆಗುವುದಿಲ್ಲ.  ಐದು ರಾಜ್ಯಗಳಲ್ಲಿ ಆಡಳಿತ ವಿರೋಧಿ ಅಲೆ ಇದ್ದಿದ್ದು ಕಾಣುತ್ತದೆ. ರಾಜ್ಯದಲ್ಲಿ ಏನು ಆಗುತ್ತದೋ ನೋಡೋಣ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.