ADVERTISEMENT

ಎಎಪಿ ಸ್ಪರ್ಧೆ ಇನ್ನೂ ಅನಿಶ್ಚಿತ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2015, 20:10 IST
Last Updated 3 ಆಗಸ್ಟ್ 2015, 20:10 IST

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸೋಮವಾರ ಅಧಿಸೂಚನೆ ಹೊರಬಿದ್ದಿದೆ. ಆದರೆ ಆಮ್‌ ಆದ್ಮಿ ಪಕ್ಷ (ಎಎಪಿ) ಚುನಾವಣೆಯಲ್ಲಿ ಸ್ಪರ್ಧಿಸುವುದರ ಬಗ್ಗೆ ಇಲ್ಲಿಯವರೆಗೆ ಯಾವುದೇ ತೀರ್ಮಾನಕ್ಕೆ ಬಂದಿಲ್ಲ.

ಅಧಿಸೂಚನೆ ಹೊರಡಿಸಿದ ದಿನದಂದೇ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು  ನಿರ್ಧಾರಕ್ಕೆ ಬರಲಾಗುವುದು ಎಂದು ಪಕ್ಷ ತಿಳಿಸಿತ್ತು. ಆದರೆ, ಸೋಮವಾರ ಅಧಿಸೂಚನೆ ಹೊರಡಿಸಿದ್ದರೂ ಯಾವುದೇ ತೀರ್ಮಾನ ಕೈಗೊಂಡಿಲ್ಲ.

‘ಸೋಮವಾರ ಸಭೆ ಸೇರಿ  ತೀರ್ಮಾನಕ್ಕೆ ಬರಲು ಉದ್ದೇಶಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಸಭೆ ಸೇರಲು ಸಾಧ್ಯವಾಗಲಿಲ್ಲ. ಈ ಸಂಬಂಧ ಪಕ್ಷವು ಇನ್ನು 2–3 ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ಪಕ್ಷದ ರಾಜ್ಯ ಸಂಚಾಲಕ ಸಿದ್ಧಾರ್ಥ ಶರ್ಮಾ ಅವರು ಸೋಮವಾರ ‘ಪ್ರಜಾವಾಣಿ’ಗೆ ತಿಳಿಸಿದರು.

‘ಒಂದು ಕಡೆಗೆ ರಾಜ್ಯ ಸರ್ಕಾರವು ಚುನಾವಣೆ ನಡೆಸುತ್ತಿದೆ. ಇನ್ನೊಂದೆಡೆ ಬಿಬಿಎಂಪಿ ವಿಭಜನೆಗೆ ಪ್ರಯತ್ನಿಸುತ್ತಿದೆ. ಹಾಗಾಗಿ ಈ ಎಲ್ಲ ವಿಚಾರಗಳ ಬಗ್ಗೆ ಗಂಭೀರವಾಗಿ ಸಮಾಲೋಚಿಸಿದ ನಂತರವಷ್ಟೇ ಅಂತಿಮ ನಿರ್ಧಾರಕ್ಕೆ ಬರಲಾಗುವುದು’ ಎಂದು ಅವರು ಸ್ಪಷ್ಟಪಡಿಸಿದರು.


‘ಜನರು ತುಂಬುವ ತೆರಿಗೆ ಹಣದಿಂದ ಸರ್ಕಾರ ಚುನಾವಣೆ ನಡೆಸುತ್ತಿದೆ. ಹೊಸ ಪಾಲಿಕೆ ಅಸ್ತಿತ್ವಕ್ಕೆ ಬಂದ ಮೇಲೆ ಒಂದು ವೇಳೆ ರಾಜ್ಯಪಾಲರು ಬಿಬಿಎಂಪಿ ವಿಭಜನೆ ಮಸೂದೆಗೆ ಅಂಕಿತ ಹಾಕಿದರೆ  ಚುನಾವಣೆ ನಡೆಸಿದರೂ ಯಾವುದೇ ಪ್ರಯೋಜನವಿಲ್ಲ’ ಎಂದರು.

‘ಎಎಪಿ ಕೇವಲ ರಾಜಕೀಯ ಪಕ್ಷವಲ್ಲ. ನಾವು ನಗರದ ನಾಗರಿಕರು. ಜೊತೆಗೇ ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ. ಹಾಗಾಗಿ ಎಲ್ಲ ದೃಷ್ಟಿಕೋನಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಅವರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT