ಬೆಂಗಳೂರು: ‘ಮಾಹಿತಿ ತಂತ್ರಜ್ಞಾನ (ಐ.ಟಿ) ಕ್ಷೇತ್ರದ ಕಂಪೆನಿಗಳು ಉದ್ಯೋಗಿಗಳಿಗೆ ವಾರ್ಷಿಕ ₹ 6 ಲಕ್ಷ ಕನಿಷ್ಠ ವೇತನ ನೀಡಬೇಕು’ ಎಂದು ಕಸ್ತೂರಿ ಕರ್ನಾಟಕ ಜನಪದ ವೇದಿಕೆಯ ಐ.ಟಿ ವಿಭಾಗದ ಅಧ್ಯಕ್ಷ ಪೂರ್ಣಚಂದ್ರ ಕೀಕರ್ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಐ.ಟಿ ಕಂಪೆನಿಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಕಲ್ಪಿಸಬೇಕು. ಅವರಿಗೆ ರಾತ್ರಿ ಪಾಳಿಯ ಕೆಲಸಕ್ಕೆ ನಿಯೋಜಿಸಬಾರದು. ದಿನಕ್ಕೆ ಗರಿಷ್ಠ 8 ಗಂಟೆ ಮಾತ್ರ ಕೆಲಸದ ಅವಧಿ ನಿಗದಿಪಡಿಸಬೇಕು. ಹೆರಿಗೆ ರಜೆ ನೀಡಬೇಕು’ ಎಂದು ಆಗ್ರಹಿಸಿದರು.
‘ಬಹುರಾಷ್ಟ್ರೀಯ ಕಂಪೆನಿಗಳು ಸಕಾರಣವಿಲ್ಲದೆ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕುತ್ತಿವೆ. ಇದರಿಂದ ನಿರುದ್ಯೋಗ ಹೆಚ್ಚುತ್ತಿದೆ. ಅಲ್ಲದೆ, ಯುವ ಪದವೀಧರರಲ್ಲಿ ಉದ್ಯೋಗದ ಅಭದ್ರತೆ ಕಾಡುತ್ತಿದೆ. ಐ.ಟಿ–ಬಿ.ಟಿ ಉದ್ಯೋಗಿಗಳ ಜೀವನ ಭದ್ರತೆಗೆ ಒತ್ತಾಯಿಸಿ ಆಗಸ್ಟ್ 5ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.