ಬೆಂಗಳೂರು: ‘ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಮಸೂದೆ–2014’ನ್ನು ವಿಧಾನಪರಿಷತ್ತಿನಲ್ಲಿ ಬುಧವಾರ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.
ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಅಧಿವೇಶನದ ಕೊನೆ ದಿನ ಮಸೂದೆಯನ್ನು ಮಂಡಿಸಿದರು. ಮಸೂದೆಯ ಕುರಿತಾಗಿ ಮಾತನಾಡಿದ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ, ‘ಮಸೂದೆಗೆ ತಿದ್ದುಪಡಿ ತರುತ್ತಿರುವುದು ಸ್ವಾಗತಾರ್ಹ. ಆದರೆ, ಬಾಕಿ ಉಳಿದಿರುವ 224 ಕ್ಷೇತ್ರಗಳಿಗೆ ಶೀಘ್ರದಲ್ಲಿ ಬಗರ್ಹುಕುಂ ಸಮಿತಿಗಳನ್ನು ರಚಿಸಬೇಕು’ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕಂದಾಯ ಸಚಿವರು, ‘ಶೀಘ್ರದಲ್ಲಿ ಸಮಿತಿಗಳನ್ನು ರಚಿಸಲಾಗುವುದು. ಬೆಳಗಾವಿ ಅಧಿವೇಶನದ ವೇಳೆಗೆ ಎಲ್ಲ ಸಮಿತಿಗಳು ಕಾರ್ಯಾರಂಭ ಮಾಡಲಿವೆ’ ಎಂದರು.
ಖಾಸಗಿ ಸದಸ್ಯರ ಮಸೂದೆ ಮಂಡನೆ: ಬಿಜೆಪಿಯ ಸಿ.ಎಚ್. ವಿಜಯಶಂಕರ್ ಅವರು ‘ಕರ್ನಾಟಕ ಭೂ ಕಂದಾಯ ಕಾಯ್ದೆ– 1964ಕ್ಕೆ ಇನ್ನಷ್ಟು ತಿದ್ದುಪಡಿ ತರುವುದಕ್ಕಾಗಿ ಖಾಸಗಿ ಮಸೂದೆಯನ್ನು ಮೇಲ್ಮನೆಯಲ್ಲಿ ಮಂಡಿಸಿದರು. ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಈ ಮಸೂದೆ ಕುರಿತ ಚರ್ಚೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಸಭಾಪತಿ ಡಿ.ಎಚ್. ಶಂಕರಮೂರ್ತಿ ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.