ADVERTISEMENT

ಕಾನೂನು ತಿದ್ದುಪಡಿಗೆ ಬಿಜೆಪಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2015, 19:30 IST
Last Updated 31 ಆಗಸ್ಟ್ 2015, 19:30 IST

ಬೆಂಗಳೂರು: ಮೇಯರ್‌ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಪಾಲಿಕೆಯ ಸದಸ್ಯರಿಗೆ ಮಾತ್ರ ಮತದಾನದ ಅವಕಾಶ ಇರುವಂತೆ ಕಾನೂನು ತಿದ್ದುಪಡಿ ಮಾಡಬೇಕು ಎಂದು ಬಿಜೆಪಿ ವಕ್ತಾರ ಎಸ್. ಸುರೇಶ್ ಕುಮಾರ್ ಆಗ್ರಹಿಸಿದರು.

ಪಕ್ಷದ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘‍ಪಾಲಿಕೆ ಸದಸ್ಯರಲ್ಲದವರಿಗೆ ಮತದಾನದ ಹಕ್ಕು ಇರದಂತೆ ಕಾನೂನು ತಿದ್ದುಪಡಿ ಮಾಡುವ ಅಗತ್ಯವಿದೆ’ ಎಂದು ಹೇಳಿದರು.

ಬಿಬಿಎಂಪಿ ಚುನಾವಣೆಯಲ್ಲಿ ಜನರಿಂದ ತಿರಸ್ಕೃತಗೊಂಡಿದ್ದರೂ, ಕಾಂಗ್ರೆಸ್ಸಿಗರು ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದ್ದಾರೆ. ಕಡಿಮೆ ಸ್ಥಾನ ಬಂದರೇನಂತೆ, ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕು, ವರಿಷ್ಠರನ್ನು ಓಲೈಸಬೇಕು ಎಂಬ ಇರಾದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಎಂದು ಟೀಕಿಸಿದರು.

ರಕ್ಷಣೆಗೆ ಒತ್ತಾಯ: ಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಅವರ ಹತ್ಯೆ ಆಘಾತಕಾರಿ ಎಂದು ಹೇಳಿದ ಸುರೇಶ್ ಕುಮಾರ್, ‘ಪ್ರಾಣ ಬೆದರಿಕೆ ಎದುರಿಸುತ್ತಿರುವ ಸಾಹಿತಿ, ಬರಹಗಾರರಿಗೆ ಸರ್ಕಾರ ರಕ್ಷಣೆ ಒದಗಿಸಬೇಕು’ ಎಂದು ಆಗ್ರಹಿಸಿದರು.

ಡಾ. ಕಲಬುರ್ಗಿ ಅವರನ್ನು ಹತ್ಯೆ ಮಾಡಿದವರನ್ನು ಶೀಘ್ರ ಪತ್ತೆಮಾಡಬೇಕು. ಅವರಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ಇಂತಹ ಘಟನೆ ಮತ್ತೆಂದೂ ನಡೆಯದಂತೆ ನಿಗಾ ವಹಿಸಬೇಕು ಎಂದು ಒತ್ತಾಯಿಸಿದರು. ಪರಿಷತ್‌ ಸದಸ್ಯ ಅಶ್ವತ್ಥನಾರಾಯಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.