ಬೆಂಗಳೂರು: ‘ಕೃಷಿ ಕ್ಷೇತ್ರಕ್ಕೆ ನೀಡಲಾಗುತ್ತಿರುವ ಅನುದಾನ ಯಾವ ರೀತಿ ಬಳಕೆಯಾಗುತ್ತಿದೆ ಎಂಬುವುದರ ಬಗ್ಗೆ ಪರಿಶೀಲಿಸಲು ಸರ್ಕಾರ ಸಮಿತಿ ರಚಿಸಬೇಕಾದ ಅಗತ್ಯ ಇದೆ’ ಎಂದು ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ಎಲ್. ಮಹೇಶ್ವರ್ ಹೇಳಿದರು.
ಕೃಷಿ ತಂತ್ರಜ್ಞರ ಸಂಸ್ಥೆಯು ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಕೃಷಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ಬರುತ್ತಿದೆ. ಆದರೆ, ಅನುಷ್ಠಾನದಲ್ಲಿ ಹಿನ್ನಡೆಯಾಗುತ್ತಿದೆ. ಹೀಗಾಗಿ ಅದನ್ನು ಪರಿಶೀಲಿಸಿ ಸದ್ಬಳಕೆಯಾಗುವಂತೆ ನೋಡಿಕೊಂಡಾಗ ಮಾತ್ರ ಕೃಷಿ ಕ್ಷೇತ್ರದ ಅಭಿವೃದ್ಧಿ ಸಾಧ್ಯ’ ಎಂದರು.
ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಎಚ್.ಶಿವಣ್ಣ ಮಾತನಾಡಿ, ‘ಜನಸಂಖ್ಯೆಗೆ ಅನುಗುಣವಾಗಿ ಆಹಾರಧಾನ್ಯ ಉತ್ಪಾದಿಸಬೇಕಾದ ಸವಾಲು ಕೃಷಿ ಕ್ಷೇತ್ರದ ಮೇಲಿದೆ. 2020ರ ವೇಳೆಗೆ 300 ಟನ್ ದಶಲಕ್ಷ ಆಹಾರಧಾನ್ಯ ಬೇಕಾಗುತ್ತದೆ. ಹೀಗಾಗಿ ಉತ್ಪಾದನಾ ಮಟ್ಟ ಹೆಚ್ಚಿಸಲು ಚಿಂತನೆ ನಡೆಸಬೇಕು’ ಎಂದು ಹೇಳಿದರು. ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಟಿ.ಎನ್.ಪ್ರಕಾಶ್ ಕಮ್ಮರಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಇತರರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.