ಬೆಂಗಳೂರು: ‘ಹವಾಮಾನ ವೈಪರೀತ್ಯ ಸೇರಿದಂತೆ ಕೃಷಿಯಲ್ಲಿ ಆಗುತ್ತಿರುವ ಬದಲಾವಣೆಗಳಿಗೆ ತಕ್ಕಂತೆ ಯೋಜನೆಗಳನ್ನು ರೂಪಿಸಬೇಕು. ಆಗ ಮಾತ್ರ ದೇಶಕ್ಕೆ ಅಗತ್ಯವಿರುವ ಆಹಾರ ಉತ್ಪಾದನೆ ಮಾಡಬಹುದು’ ಎಂದು ಭಾರತೀಯ ಕೃಷಿ ಅನುಸಂಧಾನ ಪರಿಷತ್ನ ನಿವೃತ್ತ ಮಹಾನಿರ್ದೇಶಕ ಡಾ.ಎಸ್. ಅಯ್ಯಪ್ಪನ್ ಹೇಳಿದರು.
ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಕೃಷಿ ವಿಸ್ತರಣಾ ನಿರ್ದೇಶನಾಲಯದ ಆಶ್ರಯದಲ್ಲಿ ನಗರದಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ 2050ರ ವೇಳೆಗೆ 35 ಕೋಟಿ ಟನ್ ಆಹಾರ ಉತ್ಪಾದನೆ ಮಾಡಬೇಕಾದ ಅಗತ್ಯವಿದೆ’ ಎಂದರು.
‘ಬೆಳೆ ಬೆಳೆಯುವ ಮುನ್ನ ಭೂಮಿಯ ಸಿದ್ಧತೆ, ಮಣ್ಣಿನ ಆರೋಗ್ಯ, ನೀರಿನ ಮಿತಬಳಕೆ, ಬೀಜಗಳ ಬಳಕೆ, ನೂತನ ತಳಿಗಳು, ರಾಸಾಯನಿಕಮುಕ್ತ ಆಹಾರ ಉತ್ಪಾದನೆ ಕಡೆಗೆ ಗಮನ ಹರಿಸಬೇಕು’ ಎಂದು ಹೇಳಿದರು.
ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಚ್. ಶಿವಣ್ಣ ಮಾತನಾಡಿ, ‘ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆ ಉಂಟಾಗಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಕ್ಷೇತ್ರದ ಬಿಕ್ಕಟ್ಟುಗಳನ್ನು ನಿವಾರಿಸಲು ವಿ.ವಿ.ಯಲ್ಲಿ ಹಲವು ಹಂತಗಳಲ್ಲಿ ಸಂಶೋಧನೆಗಳು ನಡೆಯುತ್ತಿವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.