ADVERTISEMENT

ಕೆರೆಯ ಅಂಗಳದಲ್ಲಿ 23 ಬಡಾವಣೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2015, 20:15 IST
Last Updated 26 ನವೆಂಬರ್ 2015, 20:15 IST

ಬೆಂಗಳೂರು: ನಗರದಲ್ಲಿ 23 ಬಡಾವಣೆಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಕೆರೆ ಅಂಗಳದಲ್ಲೇ ನಿರ್ಮಿಸಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ವಿಧಾನ ಪರಿಷತ್ತಿಗೆ ಗುರುವಾರ ತಿಳಿಸಿದರು.

ಕಾಂಗ್ರೆಸ್ಸಿನ ವಿ.ಎಸ್. ಉಗ್ರಪ್ಪ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಕೆರೆ ಅಂಗಳದಲ್ಲಿ ನಿರ್ಮಿಸಿದ ಬಡಾವಣೆಗಳಲ್ಲಿ ಒಟ್ಟು 3,230 ನಿವೇಶನ ರಚಿಸಲಾಗಿದೆ, 2,926 ನಿವೇಶನ ಹಂಚಿಕೆ ಮಾಡಲಾಗಿದೆ’ ಎಂದರು.

ಕೆರೆ ಅಂಗಳದಲ್ಲಿ 23 ಬಡಾವಣೆಗಳನ್ನು ನಿರ್ಮಿಸುವಾಗ ಅವು ಕೆರೆಯ ಮೂಲ ಸ್ವರೂಪವನ್ನು ಕಳೆದುಕೊಂಡಿದ್ದವು. ಆದರೆ, ಕಂದಾಯ ದಾಖಲೆಗಳಲ್ಲಿ ಬದಲಾವಣೆ ತರದೆ ಬಡಾವಣೆ ನಿರ್ಮಿಸಲಾಗಿದೆ. ಈ ತಪ್ಪನ್ನು ಸರಿಪಡಿಸುವ ಅಧಿಕಾರ ಜಿಲ್ಲಾಧಿಕಾರಿಗೆ ಇದೆ ಎಂದರು.

ಈ ಬಡಾವಣೆಗಳಲ್ಲಿರುವ ಜನರನ್ನು ಸರ್ಕಾರ ಒಕ್ಕಲೆಬ್ಬಿಸುವುದಿಲ್ಲ. ಆದರೆ ಇನ್ನು ಮುಂದೆ ಕೆರೆ ಜಾಗ ಯಾವುದೇ ಕಾರಣಕ್ಕೂ ಒತ್ತುವರಿ ಆಗದಂತೆ ನಿಗಾ ವಹಿಸಲಾಗುವುದು ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.