ಬೆಂಗಳೂರು: ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು (ತಿದ್ದುಪಡಿ) ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆ ವತಿಯಿಂದ ಪುರಭವನದ ಮುಂದೆ ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ಜನಶಕ್ತಿ, ಕರ್ನಾಟಕ ಜನಾರೋಗ್ಯ ಚಳವಳಿ, ಕರ್ನಾಟಕ ರಣಧೀರ ಪಡೆ ಹಾಗೂ ಸ್ವರಾಜ್ ಅಭಿಯಾನ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.
ಖಾಸಗಿ ಆಸ್ಪತ್ರೆಗಳ ಬೇಜವಾಬ್ದಾರಿತನದ ಚಿಕಿತ್ಸೆ ಹಾಗೂ ದುಬಾರಿ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ ಹಾಕಲು ಆರೋಗ್ಯ ಸಚಿವ ಕೆ.ಆರ್.ರಮೇಶ್ ಕುಮಾರ್ ಅವರು ಜನಪರ ಮಸೂದೆ ಮಂಡಿಸಲು ಮುಂದಾಗಿದ್ದಾರೆ. ಖಾಸಗಿ ವೈದ್ಯರು ಹಾಗೂ ಎಲ್ಲ ಜನಪ್ರತಿನಿಧಿಗಳು ನೈತಿಕವಾಗಿ ಮಸೂದೆಗೆ ಬೆಂಬಲ ವ್ಯಕ್ತಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ರಾಘವೇಂದ್ರ, ‘ಖಾಸಗಿ ವೈದ್ಯರಿಗೆ ಪ್ರತಿಭಟನೆ ಮಾಡುವ ಯಾವುದೇ ನೈತಿಕತೆ ಇಲ್ಲ. ಅವರ ಪ್ರತಿಭಟನೆ ಪರಿಣಾಮ ಚಿಕಿತ್ಸೆ ಸಿಗದೆ ರಾಜ್ಯದಾದ್ಯಂತ ಒಟ್ಟು 41 ಅಮಾಯಕರು ಮೃತಪಟ್ಟಿದ್ದಾರೆ. ಅಮಾಯಕರ ಸಾವಿಗೆ ಖಾಸಗಿ ವೈದ್ಯರೇ ಕಾರಣ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
**
‘ಕೆಪಿಎಂಇ ಮಂಡಿಸದಿದ್ದರೆ ಸುವರ್ಣಸೌಧಕ್ಕೆ ಮುತ್ತಿಗೆ’
ಬೆಂಗಳೂರು: ‘ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು (ಕೆಪಿಎಂಇ) ಬೆಳಗಾವಿ ಅಧಿವೇಶನದಲ್ಲಿ ಮಂಡಿಸದಿದ್ದರೆ, ಇದೇ 20 ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ’ ಎಂದು ಕರ್ನಾಟಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಲಿಂಗೇಗೌಡ ಎಚ್ಚರಿಸಿದರು.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇದು ಖಾಸಗಿ ಆಸ್ಪತ್ರೆಗಳ ವಿರುದ್ಧವಾದ ಮಸೂದೆಯಲ್ಲ, ಬಡರೋಗಿಗಳ ಪರ. ರಾಜ್ಯ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯಬಾರದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.