ADVERTISEMENT

ಜನೌಷಧ ಮಳಿಗೆ ತೆರೆಯಿರಿ

ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಅನಂತಕುಮಾರ್ ಸೂಚನೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2015, 20:12 IST
Last Updated 30 ಮಾರ್ಚ್ 2015, 20:12 IST

ಬೆಂಗಳೂರು: ‘ರಾಜ್ಯದಲ್ಲಿ ಸಾರ್ವಜನಿಕರಿಗೆ ಕಡಿಮೆ ಬೆಲೆಯಲ್ಲಿ ಔಷಧಿಗಳು ದೊರೆಯಲು ಜನೌಷಧ ಮಳಿಗೆಗಳನ್ನು ತೆರೆಯುವಂತೆ ಸರ್ಕಾರಕ್ಕೆ ಸೂಚಿಸಿದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಕೇಂದ್ರ ಸಚಿವ ಅನಂತ್‌ ಕುಮಾರ್‌ ಬೇಸರ ವ್ಯಕ್ತಪಡಿಸಿದರು.

ಸೋಮವಾರ ಎನ್‌ಆರ್‌ ಕಾಲೋನಿಯಲ್ಲಿ ವಿವಿಧೋದ್ದೇಶ ಕಟ್ಟಡ,  ಹೆರಿಗೆ ಆಸ್ಪತ್ರೆಯ ಡಯಾಲಿಸಿಸ್ ಘಟಕ ಹಾಗೂ ಲ್ಯಾಬೊರೇಟರಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೂ ಒಂದು ಕೋಟಿ ವೆಚ್ಚದಲ್ಲಿ ಈ ಕಟ್ಟಡ ನಿರ್ಮಿಸಲಾಗಿದೆ.

‘ಸಾರ್ವಜನಿಕರಿಗೆ ಕಡಿಮೆ ಬೆಲೆಯಲ್ಲಿ ಔಷಧಗಳು ದೊರೆಯಬೇಕೆಂಬ ಉದ್ದೇಶದಿಂದ  ಜನೌಷಧಿ ಮಳಿಗೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ತೆರೆಯುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿತ್ತು. ಈ ವಿಷಯವನ್ನು ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರ ಗಮನಕ್ಕೆ ತಂದರೂ ಅವರಿಂದ ಇನ್ನೂ ಉತ್ತರ ಬಂದಿಲ್ಲ. ಮಧ್ಯಪ್ರದೇಶ, ಛತ್ತೀಸಗಡ, ರಾಜಸ್ತಾನ ಸೇರಿದಂತೆ ದೇಶದ 7 ರಾಜ್ಯಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಮಳಿಗೆಗಳನ್ನು ತೆರೆದಿವೆ’ ಎಂದು ಮಾಹಿತಿ ನೀಡಿದರು.

‘ಕೇಂದ್ರ ಸರ್ಕಾರ ಸಾರ್ವಜನಿಕರಿಗಾಗಿ ಜಾರಿಗೆ ತಂದಿರುವ ಜನ ಸುರಕ್ಷಾ ವಿಮಾ ಯೋಜನೆ, ಜೀವನಸ್ಫೂರ್ತಿ, ಜೀವ ವಿಮೆ ಹಾಗೂ ಅಟಲ್‌ ಬಿಹಾರಿ ವಾಜಪೇಯಿ ಪಿಂಚಣಿ ಯೋಜನೆಗಳನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಅವರು ತಿಳಿಸಿದರು.

ಮುಖ್ಯಾಂಶಗಳು
* ಕಟ್ಟಡದಲ್ಲಿ ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರು ಶಾಖೆಯ ಕಚೇರಿ ಇದೆ
* ಇ–ಗ್ರಂಥಾಲಯ, ಬಿಬಿಎಂಪಿ ಕಂದಾಯ, ಆರೋಗ್ಯ, ಶಿಕ್ಷಣ ಇಲಾಖೆಗಳ ಕಚೇರಿ
* ಬೆಂಗಳೂರು ಒನ್‌ ಕೇಂದ್ರವೂ ಕಾರ್ಯ ನಿರ್ವಹಿಸಲಿದೆ

ಮೇಯರ್‌ ಎನ್‌.ಶಾಂತಕುಮಾರಿ ಅವರು ಮಾತನಾಡಿ, ‘ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಹೆರಿಗೆ ಆಸ್ಪತ್ರೆಯನ್ನು ಜನತೆ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ತಿಳಿಸಿದರು.

ಹೊರಗಡೆ ಮಾರುಕಟ್ಟೆಯಲ್ಲಿ ರೂ100ಕ್ಕೆ ದೊರೆಯುವ ಔಷಧಿ ಜನೌಷಧಿ ಮಳಿಗೆಗಳಲ್ಲಿ ಕೇವಲ ರೂ25ಕ್ಕೆ ದೊರೆಯುತ್ತದೆ.
ಅನಂತಕುಮಾರ್‌,ಕೇಂದ್ರ ಸಚಿವ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.