ADVERTISEMENT

ಜೆಡಿಎಸ್‌ ಪಟ್ಟಿ ಗುರುವಾರ ಪ್ರಕಟ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2015, 20:11 IST
Last Updated 1 ಆಗಸ್ಟ್ 2015, 20:11 IST

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಟಿಕೆಟ್‌ ಹಂಚುವ ವೇಳೆ, ಜನಸ್ನೇಹಿ ಧೋರಣೆ ಇರುವ ಮುಖಂಡರಿಗೆ ಆದ್ಯತೆ ನೀಡಲಾಗುವುದು ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಪ್ರಕಟಿಸಿದರು.

ಟಿಕೆಟ್‌ ಆಕಾಂಕ್ಷಿಗಳು ಮತ್ತು ಪಕ್ಷದ ಮುಖಂಡರ ಜೊತೆ ಪಕ್ಷದ ಕಚೇರಿಯಲ್ಲಿ ಶನಿವಾರ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಹಲವು ವರ್ಷಗಳಿಂದಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದವರಿಗೆ ಕೂಡ ಆದ್ಯತೆ ಇದೆ’ ಎಂದುಹೇಳಿದರು.

ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಗುರುವಾರ ಪಕ್ಷದ ಸಮಾವೇಶ ನಡೆಯಲಿದೆ. ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಅಲ್ಲಿ ಬಿಡುಗಡೆ ಮಾಡಲಾಗುವುದು. ಅಭ್ಯರ್ಥಿ ಹೇಗೆ ಕೆಲಸ ಮಾಡಬೇಕು ಎಂಬ ಬಗ್ಗೆ, ಅವರಿಂದ ಜನರಿಗೆ ಕೊಡಿಸಬೇಕಿರುವ ಭರವಸೆಗಳ ಬಗ್ಗೆ ಸಮಾವೇಶದಲ್ಲಿ ತೀರ್ಮಾನಿಸಲಾಗುವುದು ಎಂದು ಹೇಳಿದರು.

ಸಮರ್ಥ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲಾಗುವುದು. ಚುನಾವಣೆಯನ್ನು ಜೆಡಿಎಸ್‌ ಗಂಭೀರವಾಗಿ ಪರಿಗಣಿಸಿದೆ. ಆದರೆ ಸರ್ಕಾರ ಚುನಾವಣೆಯನ್ನು ಮತ್ತೆ ಮುಂದೂಡಲು ಹವಣಿಸುತ್ತಿದೆ. ಹೈಕೋರ್ಟ್‌ಗೆ ಮತ್ತೆ ಅರ್ಜಿ ಸಲ್ಲಿಸಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ ಎಂದು ಅವರು ಪ್ರಶ್ನೆಯೊಂದಕ್ಕೆ
ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.