ಬೆಂಗಳೂರು: ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಜಾಗ ನೀಡಲು ತಕರಾರು ಮಾಡುತ್ತಿರುವ ಬೆಂಗಳೂರು ದಕ್ಷಿಣ ತಹಶೀಲ್ದಾರ್ ಎಸ್.ಎಂ. ಶಿವಕುಮಾರ್ ಅವರನ್ನು ಅಮಾನತು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ನಿರ್ದೇಶನ ನೀಡಿದ್ದಾರೆ. ಬೆಂಗಳೂರು ಪ್ರಾದೇಶಿಕ ಆಯುಕ್ತೆ ಎಂ.ವಿ. ಜಯಂತಿ ಅವರಿಗೆ ಷೋಕಾಸ್ ನೋಟಿಸ್ ನೀಡು ವಂತೆಯೂ ಸೂಚಿಸಿದ್ದಾರೆ.
‘ಪಿಇಎಸ್ ಕಾಲೇಜು ಬಳಿ ಕ್ಯಾಂಟೀನ್ ಆರಂಭಿಸಲು ಸ್ಥಳ ಗುರುತಿಸಿದ್ದೇವೆ. ಇದಕ್ಕೆ ಜಯಂತಿ ಹಾಗೂ ಶಿವಕುಮಾರ್ ಅಡ್ಡಿಪಡಿಸುತ್ತಿದ್ದಾರೆ. ಇದರಿಂದಾಗಿ ಯೋಜನೆಗೆ ಹಿನ್ನಡೆಯಾಗಿದೆ’ ಎಂದು ಬಿಬಿಎಂಪಿ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.
ಎರಡು ವರ್ಷಗಳ ಹಿಂದೆ ಈ ಜಾಗವನ್ನು ಜಿಲ್ಲಾಡಳಿತ ಕಂದಾಯ ಇಲಾಖೆಯ ವಶಕ್ಕೆ ಪಡೆದಿತ್ತು.
‘ಈ ಬಗ್ಗೆ ಮುಖ್ಯಮಂತ್ರಿ ಕಚೇರಿಯಿಂದ ನಿರ್ದೇಶನ ಬಂದಿದೆ. ಈ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಕಡತ ಸಿದ್ಧಪಡಿಸುವಂತೆ ಇಲಾಖೆಯ ಅಧೀನ ಕಾರ್ಯದರ್ಶಿಗೆ ಸೂಚನೆನೀಡಿದ್ದೇನೆ’ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ (ಪ್ರಭಾರ) ಬಿ. ಬಸವರಾಜು ತಿಳಿಸಿದರು.
ತಿಂಗಳಲ್ಲೇ ಎರಡನೇ ಸಲ ಅಮಾನತು: ‘ಜೆ.ಪಿ.ನಗರದ 9ನೇ ಹಂತದ ಕೊತ್ತನೂರು ವ್ಯಾಪ್ತಿಯ 57 ಎಕರೆ ಜಮೀನಿನಲ್ಲಿ ಮೇಲ್ಮನವಿಗೆ ಅವಕಾಶ ನೀಡದೆ ಕಾಂಪೌಂಡ್ ಕೆಡವಲಾಗಿದೆ’ ಎಂದು ಆರೋಪಿಸಿ ಎಸ್.ಸಿ.ಗೋಕರ್ಣ ಎಂಬುವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನುಕಳೆದ ತಿಂಗಳ 14ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ರವಿ ಮಳಿಮಠ ಅವರು, ‘ಉಪ ವಿಭಾಗಾಧಿಕಾರಿ ಮತ್ತು ತಹಶೀಲ್ದಾರ್ ಶಿವಕುಮಾರ್ ಅವರನ್ನು ಅಮಾನತು ಮಾಡಬೇಕು’ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿ
ಸಿದ್ದರು. ಏಕಸದಸ್ಯ ನ್ಯಾಯಪೀಠದ ನಿರ್ದೇಶನಕ್ಕೆ ವಿಭಾಗೀಯ ನ್ಯಾಯಪೀಠ ಜುಲೈ 3ರಂದು ತಡೆ ನೀಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.