ಬೆಂಗಳೂರು: ನಗರದಲ್ಲಿ ನಿಫಾ ಹರಡದಂತೆ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಿಂದ ಬರುವ ಬಸ್ಗಳ ಮೇಲೆ ನಿಗಾ ಇರಿಸಲಾಗಿದೆ. ಪೋಸ್ಟರ್ ಅಂಟಿಸಿ ಜಾಗೃತಿ ಹೆಚ್ಚಿಸುವ ಕ್ರಮ ಕೈಗೊಳ್ಳಲಾಗಿದೆ.
ಈ ಕುರಿತು ನಗರ ಜಿಲ್ಲಾಧಿಕಾರಿ ದಯಾನಂದ್ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮಳೆಗಾಲ ಆರಂಭವಾಗುವ ಸಮಯದಲ್ಲಿ ಚಿಕನ್ ಗುನ್ಯಾ, ಡೆಂಗಿ, ಮಲೇರಿಯಾದಂತಹ ರೋಗಗಳು ಹೆಚ್ಚುತ್ತವೆ. ಈಗ ನಿಫಾ ಕೂಡ ಜನರಲ್ಲಿ ಆತಂಕ ಹೆಚ್ಚಿಸಿದೆ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಇದಕ್ಕೆ ಮೊದಲ ಪರಿಹಾರ. ಆದ್ದರಿಂದ ನಗರದಲ್ಲಿ ಜಾಗೃತಿ ಹೆಚ್ಚಿಸುವ ಕೆಲಸ ಮಾಡಲಿದ್ದೇವೆ’ ಎಂದು ಹೇಳಿದರು.
‘ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಕರೆದು ಸಭೆ ಮಾಡಲಾಗಿದೆ. ನಗರದಲ್ಲಿ ನಿಫಾ ಲಕ್ಷಣಗಳು ಇರುವ ರೋಗಿಗಳು ಕಂಡುಬಂದರೆ ತಕ್ಷಣ ಮಾಹಿತಿ ನೀಡಬೇಕು ಎಂದು ಆದೇಶ ನೀಡಲಾಗಿದೆ. ಕೇರಳಕ್ಕೆ ಹೋಗಿ ಬರುವ ಬಸ್ ಚಾಲಕರು ರಜೆ ಕೇಳಿದರೆ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಳ್ಳಬೇಕು. 15 ದಿನಗಳ ಹಿಂದೆ ಅಲ್ಲಿಂದ ಬಂದವರಿಗೆ ಕೂಡ ಜ್ವರ, ಶೀತ, ಕೆಮ್ಮು ಇದ್ದರೆ ಅಂತವರು ಪರೀಕ್ಷೆ ಮಾಡಿಸಿಕೊಳ್ಳಬೇಕು. ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹಾಗೂ ದಾದಿಯರ ರಕ್ಷಣೆಗೆ ಕೂಡ ಮೊದಲ ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ’ ಎಂದರು.
ಇದನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.