ADVERTISEMENT

ನೇಮಕಾತಿ ನಿಯಮ: ತಿದ್ದುಪಡಿ ಕೈಬಿಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಮೇ 2016, 19:55 IST
Last Updated 2 ಮೇ 2016, 19:55 IST

ಬೆಂಗಳೂರು: ವಿಧಾನ ಪರಿಷತ್ತಿನ ವೃಂದ ಮತ್ತು ನೇಮಕಾತಿ ನಿಯಮಾವಳಿಗಳಿಗೆ ತರಲು ಉದ್ದೇಶಿಸಿರುವ ತಿದ್ದುಪಡಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ತಿನ ಸಚಿವಾಲಯದ ನೌಕರರ ಸಂಘ ಮನವಿ ಸಲ್ಲಿಸಿದೆ.

‘30 ದಿನಗಳಲ್ಲಿ ನಿವೃತ್ತರಾಗಲಿರುವ ವಿಧಾನ ಪರಿಷತ್ತಿನ ಕಾರ್ಯದರ್ಶಿ ವಿ. ಶ್ರೀಶ್ ಅವರು ದುರುದ್ದೇಶದಿಂದ ಮತ್ತು ಸ್ವಜನ ಪಕ್ಷಪಾತದಿಂದ ಈ ತಿದ್ದುಪಡಿಯನ್ನು ಅನುಮೋದನೆಗಾಗಿ ತರಾತುರಿಯಲ್ಲಿ ಸಲ್ಲಿಸಿದ್ದಾರೆ. ಶ್ರೀಶ್ ಅವರು ಎಂಟು ವರ್ಷ ನಾಲ್ಕು ತಿಂಗಳುಗಳಿಂದ ಕಾರ್ಯದರ್ಶಿ ಹುದ್ದೆಯಲ್ಲಿದ್ದು, ಪ್ರಸ್ತುತ ನಿಯಮಗಳ ಪ್ರಕಾರ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಅರ್ಹರಲ್ಲದಿದ್ದರೂ ಆ ಹುದ್ದೆಗಾಗಿ ಲಾಬಿ ನಡೆಸುತ್ತಿದ್ದಾರೆ. ನೌಕರ ವಿರೋಧಿ ಆಡಳಿತ ನಡೆಸುತ್ತ ಬಂದಿರುವ ಅವರನ್ನು ಆ ಹುದ್ದೆಗೆ ನೇಮಕ ಮಾಡಿದರೆ ಅನ್ಯಾಯಕ್ಕೆ ಒಳಗಾದ ನೌಕರರು ಆತ್ಮಹತ್ಯೆ ಮಾಡಿಕೊಳ್ಳುವುದು ಖಚಿತ’ ಎಂದು  ಸಂಘದ ಅಧ್ಯಕ್ಷ ವೆಂಕನಗೌಡ ಪಾಟೀಲ್‌ ಮತ್ತು ಪ್ರಧಾನ ಕಾರ್ಯದರ್ಶಿ ಎಚ್‌.ಕೆ. ಪುಟ್ಟಸ್ವಾಮಿ ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಮನವಿ: ವಿಧಾನ ಪರಿಷತ್ತಿನ ವೃಂದ ಮತ್ತು ನೇಮಕಾತಿ ನಿಯಮಾವಳಿಗಳಿಗೆ ತರಲು ಉದ್ದೇಶಿಸಿರುವ ತಿದ್ದುಪಡಿ ಬಹುಪಾಲು ನೌಕರರಿಗೆ ಮಾರಕವಾಗಿದೆ ಮತ್ತು ಸ್ವಜನ ಪಕ್ಷಪಾತದಿಂದ ಕೂಡಿದೆ. ಹೀಗಾಗಿ ಈ ತಿದ್ದುಪಡಿಗೆ ಅವಕಾಶ ನೀಡಬಾರದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ  ಬಿ.ಪಿ. ಮಂಜೇಗೌಡ ಮನವಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.