ADVERTISEMENT

ಪಾದಚಾರಿ ಮಾರ್ಗಗಳ ರಕ್ಷಣೆಗೆ ವೆಬ್‌ಸೈಟ್‌

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2015, 20:13 IST
Last Updated 26 ನವೆಂಬರ್ 2015, 20:13 IST

ಬೆಂಗಳೂರು: ನಗರದ ಪಾದಚಾರಿ ಮಾರ್ಗಗಳನ್ನು ಬೀದಿ ಬದಿ ವ್ಯಾಪಾರಿಗಳಿಂದ ಮುಕ್ತಗೊಳಿಸಲು ಬೆಂಗಳೂರು ನಗರಾಭಿವೃದ್ಧಿ ಇಲಾಖೆಯು ವೆಬ್‌ಸೈಟ್‌ ಆರಂಭಿಸುತ್ತಿದೆ ಎಂದು ಸಚಿವ ಕೆ.ಜೆ. ಜಾರ್ಜ್‌ ವಿಧಾನ ಪರಿಷತ್ತಿಗೆ ತಿಳಿಸಿದರು.

ಪಾದಚಾರಿ ಮಾರ್ಗ ಒತ್ತುವರಿ ಕುರಿತ ದೂರನ್ನು ಸಾರ್ವಜನಿಕರು ಈ ವೆಬ್‌ಸೈಟ್‌ ಮೂಲಕ ನೇರವಾಗಿ ದಾಖಲಿಸಲು ಅವಕಾಶ ಕಲ್ಪಿಸಲಾಗುವುದು. ದೂರು ಆಧರಿಸಿ ಕೈಗೊಂಡ ಕ್ರಮದ ಬಗ್ಗೆ ದೂರುದಾರರಿಗೆ ನೇರವಾಗಿ ಮಾಹಿತಿ ನೀಡುವ ವ್ಯವಸ್ಥೆಯೂ ಬರಲಿದೆ ಎಂದು ಜಾರ್ಜ್‌ ಹೇಳಿದರು.

ಜೆಡಿಎಸ್‌ನ ಎಂ. ಶ್ರೀನಿವಾಸ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಪಾದಚಾರಿ ಮಾರ್ಗಗಳಲ್ಲಿ ಬೆಸ್ಕಾಂನವರು ಅಳವಡಿಸಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು ಒಮ್ಮಿಂದೊಮ್ಮೆಗೆ ತೆರವು ಮಾಡಿದರೆ ವಿದ್ಯುತ್‌ ಪೂರೈಕೆಗೆ ಅಡಚಣೆ ಉಂಟಾಗುತ್ತದೆ’ ಎಂದರು.

ಒಂದೂವರೆ ತಿಂಗಳಲ್ಲಿ ನೇಮಕ: ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಒಳಗೊಳ್ಳುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಆರಂಭಕ್ಕೆ ಬೇಕಿರುವ ವಿಶೇಷ ಅಧಿಕಾರಿ ನೇಮಕವನ್ನು ಒಂದೂವರೆ ತಿಂಗಳಲ್ಲಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಟಿ.ಬಿ. ಜಯಚಂದ್ರ ತಿಳಿಸಿದರು. ಬಿಜೆಪಿಯ ವೈ.ಎ. ನಾರಾಯಣಸ್ವಾಮಿ ವಿಧಾನ ಪರಿಷತ್ತಿನಲ್ಲಿ ಗುರುವಾರ ಕೇಳಿದ ಪ್ರಶ್ನೆಗೆ ಜಯಚಂದ್ರ ಈ ಉತ್ತರ ನೀಡಿದರು.

ಶ್ರೀನಿವಾಸಪುರ, ಮುಳಬಾಗಿಲು, ಕೆಜಿಎಫ್‌, ಬಂಗಾರಪೇಟೆ, ಕೋಲಾರ, ಮಾಲೂರು, ಕೆ.ಆರ್. ಪುರ, ಪುಲಿಕೇಶಿನಗರ, ಸರ್ವಜ್ಞನಗರ, ಸಿ.ವಿ. ರಾಮನ್ ನಗರ, ಮಹಾದೇವಪುರ, ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳಪುರ, ಶಿಡ್ಲಘಟ್ಟ, ಚಿಂತಾಮಣಿ, ದೇವನಹಳ್ಳಿ, ದೊಡ್ಡಬಳ್ಳಾಪುರ ಮತ್ತು ಹೊಸಕೋಟೆ ವ್ಯಾಪ್ತಿಯ ಕಾಲೇಜುಗಳು ಬೆಂಗಳೂರು ಉತ್ತರ ವಿ.ವಿ. ಅಧೀನಕ್ಕೆ ಬರಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.