ಬೆಂಗಳೂರು: ಬಿಬಿಎಂಪಿ ಚುನಾವಣೆ, ವಿಭಜನೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ನಗರದ ಕಾಂಗ್ರೆಸ್ ಶಾಸಕರು, ವಿಧಾನಪರಿಷತ್ ಸದಸ್ಯರೊಂದಿಗೆ ಚರ್ಚೆ ನಡೆಸಿದರು. ಶುಕ್ರವಾರ ರಾತ್ರಿ ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹಾಗೂ ನಗರವನ್ನು ಪ್ರತಿನಿಧಿಸುವ ಸಚಿವರೂ ಭಾಗವಹಿಸಿದ್ದರು.
‘ಬಿಬಿಎಂಪಿ ಚುನಾವಣೆಗೆ ಸಂಬಂಧ ಹೈಕೋರ್ಟ್ ಏನು ತೀರ್ಪು ನೀಡುತ್ತದೋ ತಿಳಿಯದು. ಹಾಗಾಗಿ ಚುನಾವಣೆ ಎದುರಿಸಲು ಸಜ್ಜಾಗಿ. ಅರ್ಹ ಅಭ್ಯರ್ಥಿಗಳ ಆಯ್ಕೆಯತ್ತ ಗಮನ ನೀಡಿ’ ಎಂದು ಸಿದ್ದರಾಮಯ್ಯ ಮುಖಂಡರಿಗೆ ಸಲಹೆ ನೀಡಿದರು ಎಂದು ಗೊತ್ತಾಗಿದೆ. ಆದರೆ, ಈ ಸಲಹೆಗೆ ಹೆಚ್ಚಿನ ಶಾಸಕರು ವಿರೋಧ ವ್ಯಕ್ತಪಡಿಸಿದರು ಎನ್ನಲಾಗಿದೆ.
ಚುನಾವಣೆ ನಡೆಯಲೇಬಾರದು. ಡಿ.ಕೆ ರವಿ ಸಾವು ಸೇರಿದಂತೆ ಇತ್ತೀಚೆಗೆ ರಾಜ್ಯದಲ್ಲಿ ನಡೆದಿರುವ ಪ್ರಕರಣಗಳ ಬಗ್ಗೆ ಜನರ ಅಸಮಾಧಾನ ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕವನ್ನು ಕೆಲವರು ವ್ಯಕ್ತಪಡಿಸಿದರು ಎನ್ನಲಾಗಿದೆ. ಮುಖಂಡರ ವಾದಕ್ಕೆ ಸಿ.ಎಂ ಕೂಡ ಸಹಮತ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ.
‘ಚುನಾವಣೆ ನನಗೂ ಬೇಡ. ಆದರೆ, ಪ್ರಕರಣ ಕೋರ್ಟ್ನಲ್ಲಿದೆ. ನ್ಯಾಯಾಲಯ ಏನು ಅಭಿಪ್ರಾಯ ಪಡುತ್ತದೋ ಗೊತ್ತಿಲ್ಲ. ಒಂದು ವೇಳೆ ಚುನಾವಣೆ ನಡೆಸುವ ಅನಿವಾರ್ಯ ಪರಿಸ್ಥಿತಿ ಎದುರಾದರೆ ಸ್ಪರ್ಧಿಸಲೇ ಬೇಕಾಗುತ್ತದೆ. ಹಾಗಾಗಿ ಚುನಾವಣೆಗೆ ಸಿದ್ಧರಾಗುವುದು ಉತ್ತಮ’ ಎಂದು ಸಿ.ಎಂ ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ.
ಚುನಾವಣಾ ಆಯೋಗಕ್ಕೆ ಮನವಿ: ಚುನಾವಣೆಗೆ ಅಧಿಸೂಚನೆ ಹೊರಡಿಸದಂತೆ ಸೋಮವಾರ (ಏ.20) ಸರ್ಕಾರದ ವತಿಯಿಂದ ಆಯೋಗಕ್ಕೆ ಮನವಿ ಸಲ್ಲಿಸುವ ಬಗ್ಗೆ ಸಭೆ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.