ಬೆಂಗಳೂರು: ಜಲಕ್ಷಾಮದಿಂದ ತತ್ತರಿಸಿರುವ ಪಾವಗಡ ತಾಲ್ಲೂಕಿಗೆ 2015–16ರ ಬಜೆಟ್ನಲ್ಲಿ ಸಮಗ್ರ ಕುಡಿಯುವ ನೀರಿನ ಯೋಜನೆ ಮಂಜೂರು ಮಾಡಬೇಕು ಎಂದು ‘ಜಲಕ್ಕಾಗಿ ಜನವೇದಿಕೆ’ ಸಂಘಟನೆಯ ಅಧ್ಯಕ್ಷ ಸ್ವಾಮಿ ಜಪಾನಂದ ಅವರು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫ್ಲೋರೈಡ್ಯುಕ್ತ ನೀರಿನಿಂದಾಗಿ ಪಾವಗಡದ ನಾಗರಿಕರು ಅನೇಕ ದೀರ್ಘಕಾಲಿಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಮಕ್ಕಳು ಅಂಗವೈಕಲ್ಯಕ್ಕೆ ಒಳಗಾಗಿದ್ದಾರೆ. ಮೂಳೆ ಸವೆತ, ಕಿಡ್ನಿ ಕಲ್ಲು, ಗರ್ಭಕೋಶದ ಕಾಯಿಲೆಗಳಿಂದ ಜನ ತೊಂದರೆ ಅನುಭವಿಸುತ್ತಿದ್ದಾರೆ. ಶುದ್ಧ ಕುಡಿಯುವ ನೀರಿಗಾಗಿ 30 ವರ್ಷಗಳಿಂದ ಹೋರಾಟ ನಡೆಸುತ್ತಲೇ ಬಂದಿದ್ದೇವೆ. ಆದರೆ ಇಲ್ಲಿಯವರೆಗೆ ಯಾವುದೇ ಸರ್ಕಾರ ಯೋಜನೆ ರೂಪಿಸಿಲ್ಲ’ ಎಂದು ಆರೋಪಿಸಿದರು.
ಪಾವಗಡಕ್ಕೆ ತುಂಗಭದ್ರ ಅಥವಾ ಹೇಮಾವತಿ ಜಲಾಶಯದಿಂದ ಶುದ್ಧ ಕುಡಿಯುವ ನೀರು ಒದಗಿಸಲು ₹400 ಕೋಟಿ ಮೀಸಲಿಡಬೇಕು ಎಂದು ಒತ್ತಾಯಿಸಿದ ಅವರು, ಪಾವಗಡದ ವಿವಿಧ ಸಂಘಟನೆಗಳ ಮುಖಂಡರ ನಿಯೋಗ ಮಾರ್ಚ್ 2ರಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿದೆ ಎಂದರು.
ವಿಧಾನಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ, ಚಿತ್ರದುರ್ಗ ಸಂಸದ ಚಂದ್ರಪ್ಪ, ಪಾವಗಡ ಶಾಸಕ ತಿಮ್ಮರಾಯಪ್ಪ, ಪಾವಗಡ ತಾಲ್ಲೂಕು ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಆರ್.ಪಿ. ಸಾಂಬಸದಾಶಿವರೆಡ್ಡಿ ಮುಂತಾದವರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.