ADVERTISEMENT

ಪಿಯು ಉಪನ್ಯಾಸಕರ ಪ್ರತಿಭಟನೆ

ತಾರತಮ್ಯ ನಿವಾರಿಸದಿದ್ದರೆ ಮೌಲ್ಯಮಾಪನ ಬಹಿಷ್ಕಾರ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2017, 20:04 IST
Last Updated 4 ಮಾರ್ಚ್ 2017, 20:04 IST
ಬೆಂಗಳೂರು: ವೇತನ ತಾರತಮ್ಯ ನಿವಾರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಪದವಿಪೂರ್ವ ಉಪನ್ಯಾಸಕರ ಸಂಘದ ಸದಸ್ಯರು ನಗರದ ಆನಂದರಾವ್‌ ವೃತ್ತದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
 
ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಮಾತನಾಡಿ, ‘ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದರೆ ಅನಿವಾರ್ಯವಾಗಿ ಮೌಲ್ಯಮಾಪನ ಬಹಿಷ್ಕರಿಸಬೇಕಾಗುತ್ತದೆ. ಇದರಿಂದ ಆಗುವ ತೊಂದರೆಗಳಿಗೆ ನಾವು ಜವಾಬ್ದಾರರಲ್ಲ. ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.
 
‘ಕಳೆದ ವರ್ಷ ಮೌಲ್ಯಮಾಪನ ಬಹಿಷ್ಕರಿಸಿ ಹೋರಾಟ ನಡೆಸಿದ್ದ ವೇಳೆ, ಒಂದು ವೇತನ ಬಡ್ತಿ ನೀಡಿದ ಬಳಿಕ ಜನವರಿ ವೇಳೆಗೆ ಇನ್ನೊಂದು ವೇತನ ಬಡ್ತಿ ನೀಡುವುದಾಗಿ ಸರ್ಕಾರ ಹೇಳಿತ್ತು. ಆದರೆ, ಈಗ ತನ್ನ ನಿಲುವು ಬದಲಿಸಿದೆ’ ಎಂದು ದೂರಿದರು.
 
‘ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇತನ ತಾರತಮ್ಯವನ್ನು 7ನೇ ವೇತನ ಆಯೋಗದಲ್ಲಿ ಸರಿಪಡಿಸುವಂತೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಆದರೆ, ಇದರಿಂದ ಬೇಡಿಕೆಗಳು ಈಡೇರುವುದಿಲ್ಲ’ ಎಂದರು.
 
ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ: ‘ಮಾ.9ರಿಂದ 27ರವರೆಗೆ ನಡೆಯುವ ದ್ವಿತೀಯ ಪಿಯು ಪರೀಕ್ಷಾ ಕಾರ್ಯದಲ್ಲಿ ಎಲ್ಲ ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಕಪ್ಪುಪಟ್ಟಿ ಧರಿಸಿ ಪಾಲ್ಗೊಳ್ಳಲಿದ್ದಾರೆ. ಮಾ.26ರಂದು ಉಭಯ ಸಂಘಗಳ ಪದಾಧಿಕಾರಿಗಳ ಸಭೆ ನಡೆಸಲು ನಿರ್ಧರಿಸಲಾಗಿದೆ. ಬೇಡಿಕೆಗಳನ್ನು ಈಡೇರಿಸದಿದ್ದರೆ,  ಮೌಲ್ಯಮಾಪನ ಬಹಿಷ್ಕಾರದ ಬಗ್ಗೆ ಅಧಿಕೃತ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.