ಹುಬ್ಬಳ್ಳಿ: ಹೆಚ್ಚಿನ ದರದ ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿದ ಆರೋಪದ ಮೇಲೆ ನಾಲ್ವರನ್ನು ಕಲಘಟಗಿ ಠಾಣೆ ಪೊಲೀಸರು ಭಾನುವಾರ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಹಣ ವಂಚಿಸಿದ ಆರೋಪ ಎದುರಿಸುತ್ತಿರುವ ಹರ್ಷ ಎಂಟರ್ಟೇನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಮಾಲೀಕರಾದ ಹರ್ಷ ಖಾಸನೀಸ ಅಲಿಯಾಸ್ ಸತ್ಯಬೋಧ, ಸಂಜೀವ ಖಾಸನೀಸ ಮತ್ತು ಶ್ರೀಕಾಂತ ಖಾಸನೀಸ ಅವರೊಂದಿಗೆ ಕೆಲಸ ಮಾಡುತ್ತಿದ್ದ ನಾಲ್ವರನ್ನು ವಶಕ್ಕೆ ಪಡೆದು, ವಿಚಾರಣೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರೂ ಸಹೋದರರು ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಎಸ್ಪಿ ಧರ್ಮೇಂದ್ರಕುಮಾರ ಮೀನಾ ಭೇಟಿ ನೀಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕಿದರು. ಅಲ್ಲದೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
34 ಮಂದಿ ದೂರು: ‘ಬಡ್ಡಿ ಆಸೆಗಾಗಿ ಹರ್ಷ ಎಂಟರ್ಟೇನ್ಮೆಂಟ್ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿದ್ದ 34 ಮಂದಿ ಇಲ್ಲಿವರೆಗೆ ದೂರು ನೀಡಿದ್ದಾರೆ. ಇವರು ₹ 1.26 ಕೋಟಿ ಹಣ ತೊಡಗಿಸಿರುವ ಬಗ್ಗೆ ಮಾಹಿತಿ ಇದೆ. ನೂರಾರು ಸಂಖ್ಯೆಯಲ್ಲಿ ಜನರು ಠಾಣೆಗೆ ಬಂದು ಹೋಗುತ್ತಿದ್ದಾರೆ. ಆದರೆ, ಬಹುತೇಕ ಮಂದಿ ದೂರು ನೀಡಲು ಮುಂದಾಗುತ್ತಿಲ್ಲ. ಏಜೆಂಟರ ಮೂಲಕ ಹಣ ತೊಡಗಿಸಿದವರು ದೂರಿಗೆ ಸಹಿ ಹಾಕಿದ್ದಾರೆ’ ಎಂದು ಧರ್ಮೇಂದ್ರಕುಮಾರ ಮೀನಾ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.