ADVERTISEMENT

ಬಿಜೆಪಿ ಕಾರ್ಯಕರ್ತನ ಬಂಧನಕ್ಕೆ ಯುವ ಜೆಡಿಎಸ್‌ ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2017, 20:07 IST
Last Updated 28 ಮಾರ್ಚ್ 2017, 20:07 IST
ಯುವ ಜೆಡಿಎಸ್‌ ನಗರ ಘಟಕದ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು
ಯುವ ಜೆಡಿಎಸ್‌ ನಗರ ಘಟಕದ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು   

ಬೆಂಗಳೂರು: ‘ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡರ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಹೇಳಿಕೆ ಪೋಸ್ಟ್‌ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಜಗದೀಶ್‌ ಗೌಡ (ಜಗ್ಗಿ) ಎಂಬುವರನ್ನು ಬಂಧಿಸಬೇಕು’ ಎಂದು ಆಗ್ರಹಿಸಿ ಯುವ ಜನತಾದಳದ (ಜಾತ್ಯತೀತ) ಕಾರ್ಯಕರ್ತರು ನಗರದ ಮೌರ್ಯ ವೃತ್ತದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

‘ದೇಶದ್ರೋಹಿ ದೇವೇಗೌಡ ಎಂಬ ನಿಂದನಾತ್ಮಕ ಹೇಳಿಕೆಯನ್ನು ಬಿಜೆಪಿ ಕಾರ್ಯಕರ್ತ ಜಗದೀಶ್‌  ಮಾರ್ಚ್‌ 24ರಂದು ಫೇಸ್‌ಬುಕ್‌ನಲ್ಲಿ ಹಾಕಿದ್ದರು. ದೇವೇಗೌಡರಿಗೆ ಮಾನಹಾನಿ ಉಂಟು ಮಾಡುವಂತಹ ಹೇಳಿಕೆಗಳನ್ನು ಟ್ವಿಟರ್‌, ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ನಲ್ಲಿ ಹಾಕುತ್ತ ಬರುತ್ತಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಯುವ ಜೆಡಿಎಸ್‌ ನಗರದ ಘಟಕದ ಅಧ್ಯಕ್ಷ ಎಚ್‌.ಎಂ. ರಮೇಶ್‌ ಗೌಡ ಒತ್ತಾಯಿಸಿದರು.


‘ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಯುವ ಜೆಡಿಎಸ್‌ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಅಲ್ಲಿನ ಪೊಲೀಸ್‌ ಕಮಿಷನರ್‌ಗೆ ದೂರು ನೀಡಲಾಗಿದೆ. ಆದರೆ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ದೂರಿದರು.

ADVERTISEMENT

‘ಪಕ್ಷದ ಕಾರ್ಯಕರ್ತರೊಬ್ಬರು ಮಾಜಿ ಪ್ರಧಾನಿ ವಿರುದ್ಧ ನಿಂದನಾತ್ಮಕ ಹೇಳಿಕೆ ಪೋಸ್ಟ್‌ ಮಾಡಿರುವುದು ಗೊತ್ತಿದ್ದರೂ ಬಿಜೆಪಿ ನಾಯಕರು ಇದರ ಬಗ್ಗೆ ಚಕಾರ ಎತ್ತಿಲ್ಲ. ಇದಕ್ಕೆ ಅವರ ಸಹಮತವೂ ಇದೆ ಎಂಬುದು ಇದರಿಂದ ಸಾಬೀತಾಗಿದೆ’ ಎಂದರು.

‘ಕೂಡಲೇ ಜಗದೀಶ್‌ ಅವರ ಫೇಸ್‌ಬುಕ್‌, ಟ್ವಿಟರ್‌ ಹಾಗೂ ವಾಟ್ಸ್‌ಆ್ಯಪ್‌ ಅನ್ನು ಬ್ಲಾಕ್‌ ಮಾಡಬೇಕು’ ಎಂದು ಒತ್ತಾಯಿಸಿದರು. ಬಳಿಕ ಪ್ರತಿಭಟನಾಕಾರರು ಪೊಲೀಸ್‌ ಪ್ರಧಾನ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.